ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಎರಡು ತಿಂಗಳ ಅವಧಿಯ ಸಾಧನೆ ಕುರಿತು ತಾವು ನಡೆಸಿದ ಸಮೀಕ್ಷೆಯಲ್ಲಿ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ಶ್ಲಾಘಿಸಿದ್ದಾರೆ ಎಂದು ಈದಿನ.ಕಾಮ್ ವೆಬ್ಸೈಟ್ ತಿಳಿಸಿದೆ.
39 ವಿಧಾನಸಭಾ ಕ್ಷೇತ್ರಗಳಲ್ಲಿ 152 ಮತಗಟ್ಟೆಗಳ ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಸಲಾಗಿದೆ. ಒಟ್ಟು 2,455 ಮಂದಿ ಸಮೀಕ್ಷೆಗೆ ಪ್ರತಿಕ್ರಿಯಿಸಿದ್ದಾರೆ. ಅವರ ಅಭಿಪ್ರಾಯಗಳನ್ನು ವಿಶ್ಲೇಷಿಸಿ ಸಮೀಕ್ಷಾ ವರದಿ ಸಿದ್ಧಪಡಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥ ಡಾ.ಎಚ್.ವಿ. ವಾಸು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಶೇಕಡ 69ರಷ್ಟು ಮಂದಿ ಸಿದ್ದರಾಮಯ್ಯ ಸರ್ಕಾರದ ಸಾಧನೆಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ. ಪ್ರತಿಕ್ರಿಯಿಸಿದ ಮಹಿಳೆಯರಲ್ಲಿ ಶೇ 70ರಷ್ಟು ಮಹಿಳೆಯರು ಸರ್ಕಾರದ ಕಾರ್ಯವೈಖರಿಗೆ ಸಂತೋಷ ವ್ಯಕ್ತಪಡಿಸಿದ್ದಾರೆ. ಶೇ 61ರಷ್ಟು ಜನರು ಈ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ವರದಿ ಹೇಳಿದೆ.
‘ಗ್ಯಾರಂಟಿ ಯೋಜನೆಗಳು ಉಚಿತ ಕೊಡುಗೆಗಳಲ್ಲ. ಜನರ ಹಣ ಜನರ ಜೇಬಿಗೆ ಮರಳುತ್ತಿದೆ ಎಂಬ ಅಭಿಪ್ರಾಯ ಸಮೀಕ್ಷೆಯಲ್ಲಿ ಕಂಡುಬಂದಿದೆ. ಸಮೀಕ್ಷೆಯಲ್ಲಿ ಅಭಿಪ್ರಾಯ ನೀಡಿರುವವರಲ್ಲಿ ಶೇ 73 ರಷ್ಟು ಮಂದಿ ಗ್ಯಾರಂಟಿ ಯೋಜನೆಗಳನ್ನು ಬೆಂಬಲಿಸಿದ್ದಾರೆ. ಶೇ 19 ರಷ್ಟು ಮಂದಿ ಮಾತ್ರ ಇಂತಹ ಯೋಜನೆಗಳಿಂದ ತೆರಿಗೆದಾರರಿಗೆ ಹೊರೆಯಾಗುತ್ತಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ’ ಎಂಬ ಅಂಶ ಸಮೀಕ್ಷೆಯ ವಿಶ್ಲೇಷಣಾ ವರದಿಯಲ್ಲಿದೆ.
ಗ್ಯಾರಂಟಿ ಯೋಜನೆಗಳನ್ನು ಆದ್ಯತೆ ಮೇಲೆ ಜಾರಿಗೊಳಿಸಬೇಕು ಎಂದು ಶೇ 53ರಷ್ಟು ಮಹಿಳೆಯರು ಆಗ್ರಹಿಸಿದ್ದಾರೆ. ಈ ಯೋಜನೆಗಳ ಅನುಷ್ಠಾನ ಅಗತ್ಯವಿತ್ತು ಎಂಬ ಅಭಿಪ್ರಾಯವನ್ನು ಶೇ 68ರಷ್ಟು ಜನರು ನೀಡಿದ್ದಾರೆ. ಕೃಷಿಕರು ಮತ್ತು ಕಾರ್ಮಿಕರಲ್ಲಿ ಶೇ 79ರಷ್ಟು ಜನರು ಈ ಯೋಜನೆಗಳ ಅಗತ್ಯವಿತ್ತು ಎಂದು ಹೇಳಿದ್ದಾರೆ.
ಮಹಿಳೆಯರನ್ನು ಕೇಂದ್ರೀಕರಿಸಿ ರೂಪಿಸಿರುವ ಶಕ್ತಿ, ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮಿ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿವೆ ಎಂದು ಶೇ 80 ರಷ್ಟು ಜನರು ಸಮೀಕ್ಷೆಯಲ್ಲಿ ಹೇಳಿದ್ದಾರೆ. 18ರಿಂದ 25 ವರ್ಷ ವಯಸ್ಸಿನವರಲ್ಲಿ ಸುಮಾರು ಶೇ 71ರಷ್ಟು ಜನರು ‘ಯುವ ನಿಧಿ’ ಯೋಜನೆಯನ್ನು ಸ್ವಾಗತಿಸಿದ್ದಾರೆ ಎಂದು ಸಮೀಕ್ಷಾ ವರದಿ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.