ಬೆಂಗಳೂರು: ‘ಕೇಂದ್ರ ಮತ್ತು ರಾಜ್ಯ ಸರ್ಕಾರ ಕೃಷಿ ಯಂತ್ರೋಪಕರಣ ಖರೀದಿಗೆ ನೀಡುವ ಸಬ್ಸಿಡಿ ಸೌಲಭ್ಯ ಬೆರಳೆಣಿಕೆಯಷ್ಟು ರೈತರಿಗೆ ಮಾತ್ರ ದೊರೆಯುತ್ತದೆ’ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ, ಕರ್ನಾಟಕ ಸರ್ಕಾರ, ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಒಕ್ಕೂಟ (ಎಫ್ಐಸಿಸಿಐ) ಮತ್ತು ಫೆಡರ್ ಅನಾಕೋಮಾ ಸಹಭಾಗಿತ್ವದಲ್ಲಿ ‘ಐಮಾ ಅಗ್ರಿಮ್ಯಾಕ್ ಇಂಡಿಯಾ 7ನೇ ಆವೃತ್ತಿಯ ಪ್ರದರ್ಶನ’ ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ‘ದೇಶದಲ್ಲಿ ಶೇ 80ರಷ್ಟು ಸಣ್ಣ ಮತ್ತು ಮಧ್ಯಮ ರೈತರಿದ್ದಾರೆ. ಅವರಿಗೆ ಕೈಗೆಟಕುವ ದರದಲ್ಲಿ ಆಧುನಿಕ ಕೃಷಿ ಯಂತ್ರೋಪಕರಣ ಲಭ್ಯವಾಗಬೇಕು’ ಎಂದು ತಿಳಿಸಿದರು.
‘ರೈತರು ಬೆಳೆದಂತಹ ಉತ್ಪನ್ನಗಳನ್ನು ದ್ವಿಗುಣಗೊಳಿಸುವ ಯಂತ್ರೋಪಕರಣಗಳನ್ನು ಬಳಸಬೇಕು. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ನಾವೇ ಉತ್ಪನ್ನಗಳನ್ನು ತಯಾರಿಸಬೇಕು’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ ನಿರಾಣಿ ಹೇಳಿದರು.
20 ದೇಶಗಳ 100ಕ್ಕೂ ಹೆಚ್ಚು ಪ್ರದರ್ಶಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಸೆಪ್ಟೆಂಬರ್ 3ರವರೆಗೆ ಈ ಪ್ರದರ್ಶನ ನಡೆಯಲಿದೆ.
ತೋಟಗಾರಿಕೆ ಸಚಿವ ಮುನಿರತ್ನ, ರಾಜ್ಯದ ಎಫ್ಐಸಿಸಿಐ ಕೌನ್ಸಿಲ್ ಅಧ್ಯಕ್ಷ ಉಲ್ಲಾಸ್ ಕಾಮತ್, ಎಫ್ಐಸಿಸಿಐ ಕೃಷಿ ಸಮಿತಿಯ ಅಧ್ಯಕ್ಷ ಟಿ.ಆರ್. ಕೇಶವನ್, ಕೃಷಿ ವಿ.ವಿ. ಕುಲಪತಿ ರಾಜೇಂದ್ರ ಪ್ರಸಾದ್, ಕೃಷಿ ಇಲಾಖೆ ರಾಜ್ಯ ಕಾರ್ಯದರ್ಶಿ ಶಿವಯೋಗಿ ಕಳಸದ ಇದ್ದರು.