ಬೆಂಗಳೂರು: ‘ಮುಖಂಡರು ವೈಯಕ್ತಿಕ ಪ್ರತಿಷ್ಠೆ ಹಾಗೂ ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಬದಿಗೊತ್ತಿ, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಂಗ್ರೆಸ್ ಪಕ್ಷವನ್ನು ಸಂಘಟಿಸಬೇಕು. ಆ ಮೂಲಕ ಯಲಹಂಕ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ವಶಕ್ಕೆ ಪಡೆಯಬೇಕು’ ಎಂದು ಸಂಸದ ಎಂ.ವೀರಪ್ಪ ಮೊಯಿಲಿ ಹೇಳಿದರು.
ಯಲಹಂಕದ ಸಂದೀಪ್ ಉನ್ನಿಕೃಷ್ಣನ್ ರಸ್ತೆಯಲ್ಲಿ ಲೋಕಸಭೆ ಕ್ಷೇತ್ರದ ನೂತನ ಕಾಂಗ್ರೆಸ್ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಕ್ಷೇತ್ರದಲ್ಲಿ ಪ್ರಾಮಾಣಿಕ ನಾಯಕರು ಹಾಗೂ ಕಾರ್ಯಕರ್ತರಿಗೆ ಕೊರತೆಯಿಲ್ಲ. ಆದರೆ ಮುಖಂಡರ ನಡುವಿನ ಭಿನ್ನಮತದಿಂದ ಇಲ್ಲಿ ಗೆಲುವು ಸಾಧಿಸಲು ಸಾಧ್ಯವಾಗುತ್ತಿಲ್ಲ’ ಎಂದು ಹೇಳಿದರು.
‘ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಕಾರ್ಯಕರ್ತರು ಇಂದಿನಿಂದಲೇ ರಸ್ತೆಗಿಳಿದು ಕೆಲಸ ಮಾಡಬೇಕು’ ಎಂದರು.