ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚುನಾವಣೆ: ಆಶಾಕಾರ್ಯಕರ್ತೆಯರಿಗೆ ಸಂಭಾವನೆ ನೀಡಲು ಆಗ್ರಹ

Published 15 ಏಪ್ರಿಲ್ 2024, 15:50 IST
Last Updated 15 ಏಪ್ರಿಲ್ 2024, 15:50 IST
ಅಕ್ಷರ ಗಾತ್ರ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸಿದ್ದ ಆಶಾ ಕಾರ್ಯಕರ್ತೆಯರಿಗೆ ಬಾಕಿ ಗೌರವಧನ ನೀಡಬೇಕು ಹಾಗೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾರ್ಯನಿರ್ವಹಿಸುವವರಿಗೆ ಗೌರವಧನ ನಿಗದಿ ಮಾಡಬೇಕು ಎಂದು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಆಗ್ರಹಿಸಿದೆ.

ಆಶಾ ಕಾರ್ಯಕರ್ತೆಯರು ಪ್ರೋತ್ಸಾಹಧನ ಮಾದರಿಯ ವೇತನದಲ್ಲಿ ಕೆಲಸ ಮಾಡುವವರು. ಚುನಾವಣೆ ಸಂದರ್ಭದಲ್ಲಿ ಮತಗಟ್ಟೆಗೆ ಬರುವ ಮತದಾರರಿಗೆ ಬಿಸಿಲಿನಿಂದ ತೊಂದರೆಯಾದರೆ ಅವರಿಗೆ ಒಆರ್‌ಎಸ್‌ ನೀಡುವುದು, ಆರೋಗ್ಯ ಸಮಸ್ಯೆಗಳು ಉಂಟಾದರೆ ಸಹಾಯ ಮಾಡುವುದು ಆಶಾ ಕಾರ್ಯಕರ್ತೆಯರ ಕೆಲಸವಾಗಿದೆ. ಮತದಾನ ಪೂರ್ವದಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲೂ ಆಶಾ ಕಾರ್ಯಕರ್ತೆಯರು ತೊಡಗಿಸಿಕೊಂಡಿರುತ್ತಾರೆ.

2020ರಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕೆಲಸ ಮಾಡಿದ ಆಶಾಕಾರ್ಯಕರ್ತೆಯರಿಗೆ ರಾಜ್ಯ ಚುನಾವಣಾ ಆಯೋಗದ ಆದೇಶದಂತೆ ₹ 700 ಗೌರವಧನ ನೀಡಲಾಗಿತ್ತು. ಈ ಆದೇಶ 2023ರ ವಿಧಾನಸಭೆಯಲ್ಲಿ ಅನ್ವಯವಾಗಿಲ್ಲ. ಈ ಬಗ್ಗೆ ಆಯೋಗಕ್ಕೆ ಮನವಿ ಸಲ್ಲಿಸಿದರೂ ಇಲ್ಲಿವರೆಗೆ ಕ್ರಮ ಕೈಗೊಂಡಿಲ್ಲ ಎಂದು ಸಂಘ ಬೇಸರ ವ್ಯಕ್ತಪಡಿಸಿದೆ.

ಈ ಲೋಕಸಭಾ ಚುನಾವಣೆಯಲ್ಲಿಯೂ ಕಾರ್ಯ ನಿರ್ವಹಿಸಲು ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿದೆ. ರಾಜ್ಯದಲ್ಲಿ 15,000ಕ್ಕೂ ಅಧಿಕ ಕಾರ್ಯಕರ್ತೆಯರು ಕೆಲಸ ಮಾಡಲಿದ್ದಾರೆ. ಅವರಿಗೆ ಊಟ, ತಿಂಡಿ, ಟಿಎ, ಡಿಎ ಜೊತೆಗೆ ಸಂಭಾವನೆಯನ್ನು ನೀಡಲು ಆದೇಶಿಸಬೇಕು. ಸರ್ಕಾರಿ, ಅರೆ ಸರ್ಕಾರಿ ನೌಕರರನ್ನು ನಿಯೋಜಿಸಿದರೆ ಸಂಭಾವನೆ ನೀಡುವಂತೆ ಆಶಾ ಕಾರ್ಯಕರ್ತೆಯರಿಗೂ ನೀಡಬೇಕು ಎಂದು ಎಐಯುಟಿಯುಸಿ ಸಂಯೋಜಿತ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಕೆ. ಸೋಮಶೇಖರ್‌ ಯಾದಗಿರಿ, ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT