ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರಾಭಿವೃದ್ಧಿ ಇಲಾಖೆ ಉಪಕಾರ್ಯದರ್ಶಿ ಎಲಿಷ ಆ್ಯಂಡ್ರೂಸ್‌ ಅಮಾನತು

Last Updated 22 ಏಪ್ರಿಲ್ 2022, 21:04 IST
ಅಕ್ಷರ ಗಾತ್ರ

ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯ ಉಪಕಾರ್ಯದರ್ಶಿ–3 ಆಗಿರುವ ಕೆಎಎಸ್‌ ಹಿರಿಯ ಶ್ರೇಣಿ ಅಧಿಕಾರಿ ಎಲಿಷ ಆ್ಯಂಡ್ರೂಸ್‌ ಅವರನ್ನು ರಾಜ್ಯ ಸರ್ಕಾರ ಗುರುವಾರ ಅಮಾನತು ಮಾಡಿದೆ.

ಕಡತ ವಿಲೇವಾರಿ ವೇಳೆ ವಿಳಂಬ ಧೋರಣೆ ಅನುಸರಿಸಿದ ಹಾಗೂ ಸರ್ಕಾರಿ ನೌಕರರ ತರವಲ್ಲದ ವರ್ತನೆ ತೋರಿದ ಆರೋಪವನ್ನು ಅವರು ಎದುರಿಸುತ್ತಿದ್ದರು. ಎಲಿಷ ಅವರು ಕೆಎಎಸ್‌ ಅಧಿಕಾರಿಗಳ ಸಂಘದ ಅಧ್ಯಕ್ಷರೂ ಆಗಿದ್ದಾರೆ.

‘ಕಡತಗಳನ್ನು ನಿಗದಿತ ಕಾಲಮಿತಿಯೊಳಗೆವಿಲೇವಾರಿ ಮಾಡುವಂತೆ ಸತತವಾಗಿ ನಿರ್ದೇಶನ ನೀಡಿದ್ದರೂ ಎಲಿಷ ಅವರು ನಿರ್ಲಕ್ಷಿಸಿದ್ದಾರೆ. 1966ರ ಕರ್ನಾಟಕ ನಾಗರಿಕ ಸೇವೆ (ನಡತೆ) ನಿಯಮ 3 (1) ಅನ್ನು ಉಲ್ಲಂಘಿಸಿ ಕರ್ತವ್ಯಲೋಪ ಎಸಗಿದ್ದಾರೆ. ಅವರನ್ನು ಅಮಾನತು ಮಾಡಿ, ಇಲಾಖಾ ವಿಚಾರಣೆ ಆರಂಭಿಬೇಕು’ ಎಂದು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌ ಅವರು ಇತ್ತೀಚೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.

‘ಬಿಬಿಎಂಪಿ ಎಂಜಿನಿಯರ್‌ಗಳ ಬಡ್ತಿಗೆ ಮುಖ್ಯಮಂತ್ರಿ ಹೆಸರಿನಲ್ಲೇ ₹4.50 ಕೋಟಿ ಲಂಚ ಪಡೆಯಲಾಗಿದೆ. ಇದರಲ್ಲಿ ನಗರಾಭಿವೃದ್ಧಿ ಇಲಾಖೆಯ ಕೆಲವು ಅಧಿಕಾರಿಗಳು ಭಾಗಿಯಾಗಿದ್ದಾರೆ’ ಎಂದು ಆರೋಪಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇತ್ತೀಚೆಗೆ ದೂರು ನೀಡಿತ್ತು.

‘ಎಂಜಿನಿಯರ್‌ಗಳ ಬಡ್ತಿಗೆ ₹4.5 ಕೋಟಿ ಲಂಚ; ಸಿ.ಎಂ.ಗೆ ದೂರು’ ಎಂಬ ಶೀರ್ಷಿಕೆಯಲ್ಲಿ ‘ಪ್ರಜಾವಾಣಿ’ಯ 2022ರ ಮಾರ್ಚ್‌ 30ರ ಸಂಚಿಕೆಯಲ್ಲಿ ‌ಪ್ರಕಟವಾದ ವಿಶೇಷ ವರದಿಯನ್ನೂ ಪತ್ರದ ಜೊತೆಗೆ ರಾಕೇಶ್‌ ಸಿಂಗ್‌ ಲಗತ್ತಿಸಿದ್ದರು. ಇಲಾಖಾ ವಿಚಾರಣೆ ಬಾಕಿ ಇಟ್ಟು ಎಲಿಷ ಅವರನ್ನು ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT