ಬೆಂಗಳೂರು: ನಗರದ ಕೆ.ಆರ್. ವೃತ್ತದಲ್ಲಿರುವ ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನಲ್ಲಿ (ಯುವಿಸಿಇ) ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮಂಗಳವಾರದಿಂದ ಪರೀಕ್ಷೆ ಆರಂಭಗೊಂಡಿದ್ದು, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಆರ್. ವೇಣುಗೋಪಾಲ್ ಭೇಟಿ ನೀಡಿ ಪರಿಶೀಲಿಸಿದರು.
600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. ಕೋವಿಡ್ ಕಾರಣ, ಸುರಕ್ಷತೆ ದೃಷ್ಟಿಯಿಂದ ವಿದ್ಯಾರ್ಥಿಗಳನ್ನು ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿರುವುದನ್ನು ಖಚಿತಪಡಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಯಿತು.
ವೇಳಾಪಟ್ಟಿಯನ್ನು ಈ ಹಿಂದೆಯೇ ಬಿಡುಗಡೆ ಮಾಡಿದ್ದರಿಂದ ದೂರದ ಊರುಗಳಿಂದ ವಿದ್ಯಾರ್ಥಿಗಳು ಮೊದಲೇ ಬಂದು ಹಾಸ್ಟೆಲ್ಗಳಲ್ಲಿ ಉಳಿದುಕೊಂಡಿದ್ದರು. ವಿದ್ಯಾರ್ಥಿಗಳಿಗೆ ಆರ್ಟಿ-ಪಿಸಿಆರ್ ಪರೀಕ್ಷೆ ಮಾಡಿ ಕೊರೊನಾ ಸೋಂಕು ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ಪರೀಕ್ಷೆ ಬರೆಯಲು ಅವಕಾಶ ನೀಡಲಾಯಿತು.
ಕೋವಿಡ್ ದೃಢಪಟ್ಟ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಆಂಬುಲೆನ್ಸ್, ಪಿಪಿಇ ಕಿಟ್ಗಳ ವ್ಯವಸ್ಥೆ ಮಾಡಲಾಗಿತ್ತು.
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರೊ.ಕೆ.ಆರ್. ವೇಣುಗೋಪಾಲ್, ‘ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಆಯೋಜಿಸಿದ್ದೇವೆ. ಸೆ. 12ರವರೆಗೆ ಪರೀಕ್ಷೆ ನಡೆಯಲಿದೆ’ ಎಂದರು.