ಬೆಂಗಳೂರು: ನಗರದ ಜ್ಯೋತಿ ನಿವಾಸ್ ಮಹಿಳಾ ಕಾಲೇಜಿನಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ ಪರವಾಗಿ ಒತ್ತಾಯಪೂರ್ವಕವಾಗಿ ಸಹಿ ಸಂಗ್ರಹಿಸುವ ಮೂಲಕ ಬಿಜೆಪಿ ಮುಖಂಡರು, ಎಬಿವಿಪಿ ಕಾರ್ಯಕರ್ತರು ದೌರ್ಜನ್ಯ ನಡೆಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷಈಶ್ವರ ಖಂಡ್ರೆ ಶುಕ್ರವಾರ ಆರೋಪಿಸಿದರು.
ಜೆಎನ್ಯುನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ನಗರಕ್ಕೂ ವ್ಯಾಪಿಸಿದೆ. ಕಾಯಿದೆ ಪರವಾಗಿ ಸಹಿ ಹಾಕದವರ ಮೇಲೆ ಹಲ್ಲೆ ಮಾಡಲಾಗಿದೆ. ವಿದ್ಯಾಕೇಂದ್ರಗಳಲ್ಲೂ ರಾಜಕಾರಣ ಮಾಡುತ್ತಿದ್ದು, ರಾಜ್ಯದಲ್ಲಿ ಕೋಮು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ದೂರಿದರು.
ಬೆದರಿಕೆ ಹಾಕಿದವರನ್ನೇ ಸರ್ಕಾರ ಸಮರ್ಥಿಸಿಕೊಳ್ಳುತ್ತಿದೆ. ಗೃಹ ಸಚಿವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇಂತಹ ಘಟನೆಗೆ ರಾಜ್ಯ, ಕೇಂದ್ರ ಸರ್ಕಾರಗಳೇ ಕಾರಣ. ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿದವರ ಮೇಲೆ ಪ್ರಕರಣ ದಾಖಲಿಸಿಕೊಂಡು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
‘ಬಿಜೆಪಿ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ಇಂಟರ್ನೆಟ್ ಕಡಿತ ಮಾಡುವ ಮೂಲಕ ದೌರ್ಜನ್ಯ ನಡೆಸುತ್ತಿದೆ’ ಎಂದು ಟೀಕಿಸಿದರು.