ಬೆಂಗಳೂರು: ‘ಪ್ರಧಾನಿ ನರೇಂದ್ರ ಮೋದಿ ರಾಜ ಋಷಿ. ಅವರಿಗೆ ಯಾವುದೇ ಆಸೆ ಅಥವಾ ಪ್ರಲೋಭನೆಗಳು ಇಲ್ಲ. ದೇಶವೇ ಅವರಿಗೆ ದೇವರು. ಅವರು ಪ್ರಧಾನಿ ಆಗಿದ್ದು ನಮ್ಮೆಲ್ಲರ ಸೌಭಾಗ್ಯ’ ಎಂದು ಬಿಜೆಪಿಯ ಹಿರಿಯ ನಾಯಕ ಎಸ್.ಎಂ.ಕೃಷ್ಣ ಹೇಳಿದ್ದಾರೆ.
ಆರ್.ಆರ್.ನಗರ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಮುನಿರತ್ನ ಅವರು ಬುಧವಾರ ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.
‘ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅತ್ಯಂತ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ’ ಎಂದು ಹೇಳಿದ ಕೃಷ್ಣ, ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಕನಸು ಕಾಣುತ್ತಿರುವ ಬಗ್ಗೆ ತೆಲುಗಿನ ಗಾದೆಯೊಂದನ್ನು ಹೇಳಿ ವ್ಯಂಗ್ಯವಾಡಿದರು.