ಬೆಂಗಳೂರು: ‘ಮಳೆಗಾಲ ಅಥವಾ ಪ್ರವಾಹದ ವೇಳೆ ಒಂದು ರಾಜ್ಯದ ಜಲಾಶಯದಿಂದ ನೆರೆ ರಾಜ್ಯದ ಜಲಾಶಯಗಳಿಗೆ ಹೆಚ್ಚುವರಿ ನೀರನ್ನು ಹರಿಸುವಾಗ ಮೊದಲೇ ಮಾಹಿತಿ ನೀಡುವ ವ್ಯವಸ್ಥೆ ಇದೆಯೇ ಎಂಬ ಬಗ್ಗೆ ವಿವರ ನೀಡಿ’ ಎಂದು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಈ ಕುರಿತಂತೆ ಎ. ಮಲ್ಲಿಕಾರ್ಜುನ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ಹಾಗೂ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ಪ್ರತಿವಾದಿಗಳಾದ ಕೇಂದ್ರ ಗೃಹ ಸಚಿವಾಲಯ, ಅರಣ್ಯ ಮತ್ತು ಪರಿಸರ ಸಚಿವಾಲಯ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಭಾರತೀಯ ಹವಾಮಾನ ಇಲಾಖೆ, ಜಲಶಕ್ತಿ ಸಚಿವಾಲಯ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಆದೇಶಿಸಿರುವ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.
‘ಒಂದು ರಾಜ್ಯದ ಅಣೆಕಟ್ಟೆನಿಂದ ನೆರೆ ರಾಜ್ಯಗಳಿಗೆ ಹೆಚ್ಚುವರಿ ನೀರನ್ನು ಹರಿಸುವಾಗ ಮುಂಚಿತವಾಗಿ ಮಾಹಿತಿ ನೀಡುವ ಯಾವುದೇ ಕಾನೂನು ಅಥವಾ ನಿಯಮಗಳಿಲ್ಲ. ಹಾಗಾಗಿ ಈ ನಿಟ್ಟಿನಲ್ಲಿ ಶಾಶ್ವತ ವ್ಯವಸ್ಥೆ ರೂಪಿಸಲು ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.
‘ರಾಜ್ಯದಲ್ಲಿ 2009 ಮತ್ತು 2018ರಲ್ಲಿ ಉಂಟಾದಂತಹ ಭೀಕರ ಪ್ರವಾಹದ ಸ್ಥಿತಿ ಪುನಃ ನಿರ್ಮಾಣವಾಗದಂತೆ ಕ್ರಮ ಕೈಗೊಳ್ಳುವ ತುರ್ತು ಅವಶ್ಯಕತೆ ಇದೆ’ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ.