ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಥಿಕ ಸಾಕ್ಷರತೆಯಿಂದ ಕುಟುಂಬ ಸದೃಢ: ಸಾಧ್ವಿ ನಿರಂಜನ ಜ್ಯೋತಿ

ಹಣಕಾಸು ಸಾಕ್ಷರತೆ ಸಮಾವೇಶದಲ್ಲಿ ಕೇಂದ್ರ ಸಚಿವೆ ಅಭಿಮತ
Last Updated 11 ಜನವರಿ 2023, 20:44 IST
ಅಕ್ಷರ ಗಾತ್ರ

ಬೆಂಗಳೂರು: ‘ಮಹಿಳೆಯರನ್ನು ಆರ್ಥಿಕ ಸಾಕ್ಷರರನ್ನಾಗಿ ಮಾಡಿದರೆ ಆ ಕುಟುಂಬವೂ ಆರ್ಥಿಕವಾಗಿ ಸದೃಢವಾಗಲಿದೆ. ಆದ್ದರಿಂದ ಕೇಂದ್ರ ಸರ್ಕಾರವು ‘ಜನ್‌ ಧನ್’ ಸೇರಿ ಹಲವು ಮಹಿಳಾ ಪರ ಕಾರ್ಯಕ್ರಮಗಳನ್ನು ರೂಪಿಸಿದೆ’ ಎಂದು ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ತಿಳಿಸಿದರು.

ನ್ಯಾಷನಲ್ ಅಕಾಡೆಮಿ ಆಫ್ ರುಡ್‌ಸೆಟ್ ಸಹಯೋಗದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯವು ನಗರದಲ್ಲಿ ಬುಧವಾರ ಹಮ್ಮಿಕೊಂಡ ಸಕ್ಷಮ್ ರಾಷ್ಟ್ರಮಟ್ಟದ ಹಣಕಾಸು ಸಾಕ್ಷರತೆ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

‘ಕೋವಿಡ್ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟದಿಂದ ಪಾರಾಗಲು ‘ಜನ್‌ ಧನ್‌’ದಂತಹ ಯೋಜನೆಗಳು ಸಹಕಾರಿಯಾದವು. ಹಿಂದೆ ಗ್ರಾಮೀಣ ಭಾಗದ ಜನರು ಬ್ಯಾಂಕ್‌ಗಳ ಮುಂದೆ ದಿನವಿಡೀ ಕಾಯುವ ಸ್ಥಿತಿ ಇತ್ತು. ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪರಿಸ್ಥಿತಿ ಬದಲಾಗಿ, ಡಿಜಿಟಲೀಕರಣದ ಮೂಲಕ ಬ್ಯಾಂಕಿಂಗ್ ವ್ಯವಸ್ಥೆಯನ್ನು ಸರಳೀಕರಣ ಮಾಡಲಾಯಿತು’ ಎಂದು ಹೇಳಿದರು.

‘ಹಣಕಾಸು ಸಾಕ್ಷರತೆ ಕೊರತೆಯಿಂದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಆರ್ಥಿಕ ನಿರ್ಧಾರ ಕಷ್ಟಕರವಾಗಿತ್ತು. ಆದ್ದರಿಂದ ಎಲ್ಲ ಮಹಿಳಾ ಸ್ವಸಹಾಯ ಗುಂಪಿನ ಸದಸ್ಯರಿಗೆ ಹಣಕಾಸು ಸಾಕ್ಷರತೆ ತರಬೇತಿ ನೀಡಲಾಗುತ್ತಿದೆ. ಇದರಿಂದ ಹಣಕಾಸು ಸೇವೆ, ಬ್ಯಾಂಕ್ ವ್ಯವಹಾರ, ವಿಮೆ, ಪಿಂಚಣಿ, ಸಾಲದ ಮೇಲಿನ ಬಡ್ಡಿ ಸೇರಿ ವಿವಿಧ ಹಣಕಾಸು ಸಂಬಂಧಿ ಗೊಂದಲ ನಿವಾರಣೆ ಆಗಲಿದೆ’ ಎಂದರು.

ರಾಜ್ಯ ಕೌಶಲ ಅಭಿವೃದ್ದಿ ನಿಗಮದ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ‘ರಾಜ್ಯ ಸರ್ಕಾರ ಮಹಿಳಾ ಉದ್ಯಮಿಗಳ ಸಬಲೀಕರಣಕ್ಕೆ ಆದ್ಯತೆ ನೀಡಿದೆ. ಮಹಿಳೆಯರೂ ಹಲವು ಉದ್ಯೋಗಗಳಲ್ಲಿ ತೊಡಗಲು ಕೌಶಲ ತರಬೇತಿ ನೀಡಲಾಗುತ್ತಿದೆ’ ಎಂದರು.

ಬ್ಯಾಂಕ್ ಆಫ್ ಬರೋಡಾದ ಕಾರ್ಯನಿರ್ವಾಹಕ ನಿರ್ದೇಶಕ ಅಜಯ್ ಕೆ.ಖುರಾನ, ‘ಮಹಿಳೆಯರಿಗೆ ಆರ್ಥಿಕ ಸಾಕ್ಷರತೆ ಬಗ್ಗೆ ಬ್ಯಾಂಕ್‌ಗಳು ಅರಿವು ಮೂಡಿಸುತ್ತಿವೆ. ಸೈಬರ್ ವಂಚನೆ ಬಗ್ಗೆ ಮಹಿಳೆಯರಿಗೆ ಅರಿವು ಮೂಡಿಸುವ ಕೆಲಸವೂ ಆಗಬೇಕು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT