ಬೆಂಗಳೂರು: ಕಾಚರಕನಹಳ್ಳಿ ಬಳಿಯ ಕೊಳೆಗೇರಿಯಲ್ಲಿ ವಲಸೆ ಕಾರ್ಮಿಕರಿಗೆ ಸೇರಿದ 90ಕ್ಕೂ ಹೆಚ್ಚು ಗುಡಿಸಲುಗಳಿಗೆ ಬೆಂಕಿ ಹಚ್ಚಿ ನಾಶಪಡಿಸಿದ ಪ್ರಕರಣದಲ್ಲಿ ಕಾರ್ಮಿಕರಿಗೆ ಪುನರ್ವಸತಿ ಹಾಗೂ ಪರಿಹಾರ ಕಲ್ಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಈ ಕುರಿತು ಹೈಕೋರ್ಟ್ ವಕೀಲೆ ವೈಶಾಲಿ ಹೆಗ್ಡೆ ಬರೆದಿದ್ದ ಪತ್ರ ಆಧರಿಸಿ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.
‘ಪ್ರಕರಣದ ಹಿಂದೆ ಪ್ರಭಾವಿಗಳ ಕೈವಾಡ ಇರುವುದು ಮೇಲ್ನೋಟಕ್ಕೆ ತಿಳಿದು ಬರುತ್ತದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
‘ಗುಡಿಸಲುಗಳಲ್ಲಿದ್ದ ಕಾರ್ಮಿಕರು ಎಲ್ಲಿದ್ದಾರೆ ಎಂಬ ಬಗ್ಗೆ ವಿಚಾರಣೆ ನಡೆಸಬೇಕು ಹಾಗೂ ಅವರಿಗೆ ಪುನರ್ವಸತಿ ಕಲ್ಪಿಸಿಪರಿಹಾರ ಪಾವತಿಸಬೇಕು. ಗುಡಿಸಲುಗಳಿದ್ದ ಜಾಗದ ಸದ್ಯ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡಬೇಕು’ ಎಂದು ನ್ಯಾಯಪೀಠ ನಿರ್ದೇಶಿಸಿದೆ.
ಆದೇಶ ಪಾಲನೆಗೆ ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರದ ಪರ ವಕೀಲರಿಗೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಜುಲೈ 7ಕ್ಕೆ ಮುಂದೂಡಿದೆ.