ಬೆಂಗಳೂರು: ವಸಂತನಗರದಲ್ಲಿರುವ ಐಪಿಎಸ್ ಅಧಿಕಾರಿಗಳ ವಸತಿಸಮುಚ್ಚಯದಲ್ಲಿ ಗುರುವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಅನಾಹುತ ತಪ್ಪಿಸಿದ್ದಾರೆ.
‘ನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಲವು ಐಪಿಎಸ್ ಅಧಿಕಾರಿಗಳು ಹಾಗೂ ಅವರ ಕುಟುಂಬದವರು ವಸತಿ ಸಮುಚ್ಚಯದಲ್ಲಿ ವಾಸವಿದ್ದಾರೆ. ಅಲ್ಲಿಯ ಲಿಫ್ಟ್ನಲ್ಲಿ ವಿದ್ಯುತ್ ಶಾರ್ಟ್ ಸರ್ಕೀಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿತ್ತು’ ಎಂದು ಅಗ್ನಿಶಾಮಕ ದಳದ ಮೂಲಗಳು ತಿಳಿಸಿವೆ.
‘ಒಂದನೇ ಮಹಡಿಯಿಂದ ನಾಲ್ಕನೇ ಮಹಡಿವರೆಗಿನ ಲಿಫ್ಟ್ ಭಾಗದಲ್ಲಿ ಬೆಂಕಿ ಹೊತ್ತಿ ಉರಿಯಿತು. ಸ್ಥಳಕ್ಕೆ ಹೋಗಿ ಬೆಂಕಿ ನಂದಿಸಲಾಯಿತು. ಲಿಫ್ಟ್ ಪ್ರದೇಶ ಬಿಟ್ಟರೆ, ಬೇರೆ ಯಾವ ಭಾಗದಲ್ಲೂ ಬೆಂಕಿಯಿಂದ ಹಾನಿಯಾಗಿಲ್ಲ’ ಎಂದೂ ಹೇಳಿವೆ.