ಬೆಂಗಳೂರು: ನೆರೆ ಹಾವಳಿಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ವಿದ್ಯಾರ್ಥಿಗಳ ಅಂಕಪಟ್ಟಿಗಳು ನಾಶವಾಗಿರುವ ಕಾರಣಕ್ಕೆ ವಿದ್ಯಾರ್ಥಿಗಳು ಪುನಃ ಅಂಕ ಪಟ್ಟಿಗಾಗಿ ಕೋರಿಕೆ ಸಲ್ಲಿಸಿದರೆ, ಉಚಿತವಾಗಿ ವಿತರಿಸುವಂತೆ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಶಿಕ್ಷಣ ಇಲಾಖೆಗೆ ಮನವಿ ಮಾಡಿದ್ದಾರೆ.
ಪ್ರವಾಹ ಮತ್ತು ಮಳೆಯಿಂದಾಗಿ ರಾಜ್ಯದ ಹಲವೆಡೆ ಹಲವು ವಿದ್ಯಾರ್ಥಿಗಳ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಅಂಕಪಟ್ಟಿಯು ಹಾಳಾಗಿ ಅಥವಾ ಕೊಚ್ಚಿ ಹೋಗಿರುವ ಘಟನೆಗಳು ನಡೆದಿವೆ. ಆದ್ದರಿಂದ ಪ್ರೌಢ ಶಿಕ್ಷಣ ಮಂಡಳಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಅಂಕಪಟ್ಟಿಗಳನ್ನು ವಿತರಿಸಬೇಕು ಎಂದು ತಿಳಿಸಿದ್ದಾರೆ.