ಬೆಂಗಳೂರು: ‘ಮಲ್ಲೇಶ್ವರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಕ್ಯಾಂಪಸ್ ಅನ್ನು ಶೀಘ್ರ ಅಂತರರಾಷ್ಟ್ರೀಯ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸಿ, ವಿದೇಶಿ ಭಾಷೆಗಳನ್ನು ಕಲಿಯುವ ಕೇಂದ್ರ ಆರಂಭಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ಕಾಲೇಜಿನಲ್ಲಿ ಶುಕ್ರವಾರ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ‘ವಿದ್ಯಾರ್ಥಿನಿಯರ ಭವಿಷ್ಯ ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾಲಯದ ಜತೆ ಒಪ್ಪಂದ ಮಾಡಿಕೊಂಡು ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ಗಳನ್ನು ಆರಂಭಿಸಲಾಗಿದೆ’ ಎಂದರು.
‘ರಾಜ್ಯದಲ್ಲಿರುವ 430 ಸರ್ಕಾರಿ ಪದವಿ ಕಾಲೇಜುಗಳನ್ನು ಸಮಗ್ರವಾಗಿ ಸುಧಾರಿಸಲು ಸರ್ಕಾರ ಪಣ ತೊಟ್ಟಿದೆ. ಈ ನಿಟ್ಟಿನಲ್ಲಿ ಈಗಾಗಲೇ ಈ ಶಿಕ್ಷಣ ಸಂಸ್ಥೆಗಳಲ್ಲಿ ನೂರಕ್ಕೆ ನೂರರಷ್ಟು ಡಿಜಿಟಲ್ ಕಲಿಕೆ ಮತ್ತು ಸ್ಮಾರ್ಟ್ ತರಗತಿಗಳನ್ನು ಆರಂಭಿಸಲಾಗಿದೆ’ ಎಂದು ತಿಳಿಸಿದರು.
ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀರಾಮ್, ಪ್ರಾಂಶುಪಾಲ ರವಿ, ಉಪಪ್ರಾಂಶುಪಾಲ ರವಿಶಂಕರ್, ವೀರಣ್ಣಗೌಡ, ತಂತ್ರಜ್ಞಾನ ಪರಿಣತ ರಾಮಸ್ವಾಮಿ ಇದ್ದರು.
ಕಳೆದ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.