ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತುರಹಳ್ಳಿ: 6.5 ಎಕರೆ ಅರಣ್ಯ ಒತ್ತುವರಿ ತೆರವು

Published 3 ಜನವರಿ 2024, 14:29 IST
Last Updated 3 ಜನವರಿ 2024, 14:29 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಮಾಡುವಂತೆ ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ ನೀಡಿದ 24 ಗಂಟೆಯೊಳಗೆ ಕೆಂಗೇರಿ ಬಳಿಯ ತುರಹಳ್ಳಿ ಮೀಸಲು ಅರಣ್ಯದ ಬಿ.ಎಂ.ಕಾವಲು ಬಫರ್‌ ವಲಯದಲ್ಲಿ ಒತ್ತುವರಿ ಮಾಡಲಾಗಿದ್ದ ₹60 ಕೋಟಿ ಮಾರುಕಟ್ಟೆ ಮೌಲ್ಯದ 6.5 ಎಕರೆ ಭೂಮಿ ಒತ್ತುವರಿ ತೆರವು ಮಾಡಿ, ವಶಕ್ಕೆ ಪಡೆಯಲಾಗಿದೆ.

ಹೊಸ ವರ್ಷದಲ್ಲಿ ಅರಣ್ಯ ಇಲಾಖೆಯ ಕಾರ್ಯ ಯೋಜನೆಗಳ ಬಗ್ಗೆ ಮಂಗಳವಾರ ಸಭೆ ನಡೆಸಿ ಆದ್ಯತೆ ಮೇರೆಗೆ ಒತ್ತುವರಿ ತೆರವು ಮಾಡಲು ಖಂಡ್ರೆ ಅವರು ಉನ್ನತಾಧಿಕಾರಿಗಳಿಗೆ ಸೂಚನೆ ನೀಡಿದರು. ಆ ಪ್ರಕಾರ, ಬುಧವಾರ ಬೆಳಿಗ್ಗೆ ಬಿ.ಎಂ.ಕಾವಲಿನಲ್ಲಿ ಜೆಸಿಬಿ ವಾಹನಗಳು ತೆರವು ಕಾರ್ಯಕ್ಕೆ ಚಾಲನೆ ನೀಡಿದವು.

ಬೆಂಗಳೂರು ನಗರ ಡಿಸಿಎಫ್‌ ರವೀಂದ್ರಕುಮಾರ್‌, ಎಸಿಎಫ್‌ ಸುರೇಶ್‌ ಮತ್ತು ಆರ್‌ಎಫ್‌ಓ ಗೋವಿಂದರಾಜ್ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಯ ತಂಡ ತೆರವು ಕಾರ್ಯಾಚರಣೆ ನಡೆಸಿ ಈ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ ನೆಲಸಮ ಮಾಡಲಾಯಿತು. ವಶಕ್ಕೆ ಪಡೆದ ಭೂಮಿಯಲ್ಲಿ ಬಿದಿರು ಸೇರಿದಂತೆ ನಾನಾ ಜಾತಿಯ ಸಸಿಗಳನ್ನು ನೆಡಲಾಯಿತು ಎಂದು ಅರಣ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ಈ ಅರಣ್ಯ ಪ್ರದೇಶದಲ್ಲಿ ಸುಮಾರು 6.5 ಎಕರೆಯಷ್ಟು ಭೂಮಿಯನ್ನು ಮಧುಸೂದಾನಂದ ಸ್ವಾಮಿ ಎಂಬವರು ಒತ್ತುವರಿ ಮಾಡಿ, ಮಂಜೂರಾತಿ ಮಾಡುವಂತೆ ಅರ್ಜಿ ಸಲ್ಲಿಸಿದ್ದರು, ಅರಣ್ಯ ಭೂಮಿಯಾದ ಕಾರಣ ಯಾರಿಗೂ ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ಅರಣ್ಯ ಇಲಾಖೆ ಅರ್ಜಿ ತಿರಸ್ಕರಿಸಿತ್ತು.

ಒತ್ತುವರಿದಾರರ ಬಳಿ ಅರಣ್ಯ ಭೂಮಿಗೆ ಸಂಬಂಧಿಸಿದಂತೆ ಯಾವುದೇ ಕಂದಾಯ ದಾಖಲೆ, ಕ್ರಯಪತ್ರ, ಮಂಜೂರಾತಿ ಪತ್ರ, ಸಾಗುವಳಿ ಚೀಟಿ ಯಾವುದೂ ಇಲ್ಲದ ಕಾರಣ 2017 ಆಗಸ್ಟ್‌ನಲ್ಲಿಯೇ ಈ ಒತ್ತುವರಿ ತೆರವಿಗೆ ಎಸಿಎಫ್‌ ನ್ಯಾಯಾಲಯ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಸಿಸಿಎಫ್‌ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು.

ಡಿ.23 ರಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಿಂಗರಾಜ್‌ ಅವರು ಈ ಭೂಮಿ ಅರಣ್ಯ ಇಲಾಖೆಗೆ ಸಂಬಂಧಿಸಿದ್ದೆಂದು ಮಹತ್ವದ ಆದೇಶ ನೀಡಿದ್ದರು. ಅರಣ್ಯ ಭೂಮಿ ಒತ್ತುವರಿ ಮಾಡಿರುವ ಮಧುಸೂದನಾನಂದ ಸ್ವಾಮಿ ವಿರುದ್ಧ ಈಗಾಗಲೇ 5 ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

‘ಕಾಡು ಪ್ರಕೃತಿ ಸಂಪತ್ತು ರಕ್ಷಣೆಗೆ ಆದ್ಯತೆ’

‘ಬೆಂಗಳೂರು ಸುತ್ತಮುತ್ತ ಭೂಮಿಗೆ ಬಂಗಾರದ ಬೆಲೆ ಇದೆ. ಕೆಲವರು ಸ್ವಾರ್ಥಕ್ಕಾಗಿ ಕೋಟ್ಯಂತರ ರೂಪಾಯಿ ಬೆಲೆಬಾಳುವ ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆ. ಪ್ರಕೃತಿ ಪರಿಸರ ಕಾಡು ಮತ್ತು ವನ್ಯ ಸಂಪತ್ತು ಉಳಿಸುವುದೇ ಇಲಾಖೆಯ ಕರ್ತವ್ಯ. ಬೆಂಗಳೂರಿನಲ್ಲಿ ಆದೇಶ ಆಗಿರುವ ಪ್ರಕರಣಗಳಲ್ಲಿ ಒತ್ತುವರಿ ತೆರವು ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ’ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT