ಬೆಂಗಳೂರು: ಠೇವಣಿದಾರರಿಗೆ ವಂಚಿಸಿರುವ ಆರೋಪದಡಿ ಶ್ರೀವಸಿಷ್ಠ ಕೋ–ಆಪರೇಟಿವ್ ಕ್ರೆಡಿಟ್ ಸೊಸೈಟಿ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಹನುಮಂತನಗರ ಠಾಣೆ ಪೊಲೀಸರು, ಸೊಸೈಟಿ ಅಧ್ಯಕ್ಷ ಹಾಗೂ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
‘ಠೇವಣಿದಾರರ ದೂರಿನನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಬಗ್ಗೆ ವಿಚಾರಣೆಗೆ ಹಾಜರಾಗುವಂತೆ ಅಧ್ಯಕ್ಷ ವೇಂಕಟನಾರಾಯಣ ಹಾಗೂ ಅವರ ಮಗನೇ ಆಗಿರುವ ನಿರ್ದೇಶಕ ಕೃಷ್ಣಪ್ರಸಾದ್ ಅವರಿಗೆ ನೋಟಿಸ್ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟ ದಾಖಲಾತಿಗಳನ್ನು ನೀಡಿ ತನಿಖೆಗೆ ಸಹಕರಿಸುವಂತೆ ಕೋರಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘₹ 99 ಲಕ್ಷ ಠೇವಣಿ ಇರಿಸಿದ್ದ ವ್ಯಕ್ತಿ ಸೇರಿದಂತೆ ಹಲವರು, ವಂಚನೆ ಬಗ್ಗೆ ದಾಖಲೆಗಳನ್ನು ನೀಡಿದ್ದಾರೆ. ಅವುಗಳ ಪರಿಶೀಲನೆ ನಡೆದಿದೆ. ಯಾರೆಲ್ಲ ಠೇವಣಿ ಇರಿಸಿದ್ದರು ಹಾಗೂ ಠೇವಣಿ ಮೊತ್ತವೆಷ್ಟು ಎಂಬುದು ತನಿಖೆಯಿಂದ ತಿಳಿಯಬೇಕಿದೆ’ ಎಂದೂ ಮೂಲಗಳು ತಿಳಿಸಿವೆ.