ಹಿಂದೂ ಸಲಹಾ ಸಮಿತಿ ಹೆಸರಿನಲ್ಲಿ ವಂಚನೆ: ಎಫ್ಐಆರ್
ಬೆಂಗಳೂರು: ಕೇಂದ್ರ ಸರ್ಕಾರದ ಹಿಂದೂ ಸಲಹಾ ಸಮಿತಿ ಹಾಗೂ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಹೆಸರು ಹೇಳಿಕೊಂಡು ಸಾರ್ವಜನಿಕರಿಂದ ಹಣ ಪಡೆದು ವಂಚಿಸುತ್ತಿದ್ದ ಆರೋಪದಡಿ ರಾಘವೇಂದ್ರ ಸರ್ವಂ ವಿರುದ್ಧ ಶಂಕರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ವಿಶ್ವ ಹಿಂದೂ ಪರಿಷತ್ ಸಂಘಟನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಬಸವರಾಜ್ ದೂರು ನೀಡಿದ್ದಾರೆ. ಆರೋಪಿಗಳು ಎನ್ನಲಾದ ರಾಘವೇಂದ್ರ ಸರ್ವಂ ಹಾಗೂ ರಾಜೇಶ್ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
‘ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರ ಜೊತೆ ಫೋಟೊ ತೆಗೆಸಿಕೊಂಡಿದ್ದ ಆರೋಪಿ ರಾಘವೇಂದ್ರ, ಅದೇ ಫೋಟೊಗಳನ್ನು ಸಾರ್ವಜನಿಕರಿಗೆ ತೋರಿಸುತ್ತಿದ್ದ. ತನಗೆ ರಾಜಕೀಯ ಮುಖಂಡರು ತುಂಬಾ ಪರಿಚಯವೆಂದು ಹೇಳುತ್ತಿದ್ದ. ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ’ ಎಂದೂ ಮೂಲಗಳು ಹೇಳಿವೆ.
‘ವಿಎಚ್ಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್, ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅದನ್ನು ತಿಳಿದುಕೊಂಡಿದ್ದ ರಾಘವೇಂದ್ರ, ನಕಲಿ ಗುರುತಿನ ಚೀಟಿ ಬಳಸಿಕೊಂಡು ಅಲೋಕ್ಕುಮಾರ್ ಅವರನ್ನು ಭೇಟಿಯಾಗಿ ಫೋಟೊ ತೆಗೆಸಿಕೊಂಡಿದ್ದ. ಇದು ತಿಳಿಯುತ್ತಿದ್ದಂತೆ ದೂರುದಾರ ಬಸವರಾಜ್ ಪ್ರಶ್ನಿಸಿದ್ದರು. ಅಷ್ಟಕ್ಕೆ ರಾಘವೇಂದ್ರ, ಬಸವರಾಜ್ಗೆ ಕರೆ ಮಾಡಿ ಬೆದರಿಸಿದ್ದನೆಂಬುದು ದೂರಿನಲ್ಲಿದೆ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.