ಬೆಂಗಳೂರು: ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ವಿವಿಧ ಖಾಸಗಿ ಸಂಸ್ಥೆಗಳು ಮತ್ತು ಸರ್ಕಾರೇತರ ಸಂಸ್ಥೆಗಳ ನೆರವಿನಿಂದ ಉಚಿತವಾಗಿ ಕೋವಿಡ್ ಲಸಿಕೆ ನೀಡುವ ಅಭಿಯಾನವನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ನೇತೃತ್ವದಲ್ಲಿ ಆರಂಭಿಸಲಾಗಿದೆ.
ಡೆಲ್ ಕಂಪನಿ, ಶಿಕ್ಷಣ ಫೌಂಡೇಷನ್ ಹಾಗೂ ಡಾ.ಸಿ.ಎನ್. ಅಶ್ವತ್ಥನಾರಾಯಣ ಫೌಂಡೇಷನ್ ಜಂಟಿಯಾಗಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಸಚಿವ ಡಿ.ವಿ. ಸದಾನಂದ ಗೌಡ ಅಭಿಯಾನಕ್ಕೆ ಚಾಲನೆ ನೀಡಿದರು.
ಡೆಲ್ ಕಂಪನಿ ಲಸಿಕೆಯನ್ನು ಪ್ರಾಯೋಜಿಸಿತ್ತು. ಸರ್ಕಾರಿ ಕಾಲೇಜುಗಳ 525 ಮತ್ತು ಖಾಸಗಿ ಕಾಲೇಜುಗಳ 475 ವಿದ್ಯಾರ್ಥಿಗಳಿಗೆ ಮೊದಲ ದಿನ ಲಸಿಕೆ ನೀಡಲಾಗಿದೆ.
3.5 ಲಕ್ಷ ಡೋಸ್ ಕೊಡುಗೆ: ‘ಮುಖ್ಯಮಂತ್ರಿಯವರ ಸಲಹೆಗಾರ ಪ್ರಶಾಂತ್ ಪ್ರಕಾಶ್ ಅವರು ವಿವಿಧ ಕಂಪನಿಗಳಿಂದ ಸುಮಾರು 3.5 ಲಕ್ಷ ಡೋಸ್ಗಳಷ್ಟು ಕೋವಿಡ್ ಲಸಿಕೆಯನ್ನು ಕೊಡಿಸಿದ್ದಾರೆ’ ಎಂದು ಅಶ್ವತ್ಥನಾರಾಯಣ ತಿಳಿಸಿದರು.
‘ಆದ್ಯತಾ ವಲಯದ 17 ಲಕ್ಷ ಮಂದಿಗೆ ಈಗಾಗಲೇ ಕೋವಿಡ್ ಲಸಿಕೆ ನೀಡಲಾಗಿದೆ. ಡಿಸೆಂಬರ್ ಒಳಗಾಗಿ ರಾಜ್ಯದ ಎಲ್ಲ ಜನರಿಗೂ ಲಸಿಕೆ ನೀಡುವ ಗುರಿ ಇದೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಸದಸ್ಯರಿಗೆಮುಂದಿನ ಹಂತದಲ್ಲಿ ಲಸಿಕೆ ವಿತರಿಸಲಾಗುತ್ತದೆ’ ಎಂದರು.
ಸದಾನಂದ ಗೌಡ, ‘ಅಶ್ವತ್ಥನಾರಾಯಣ ಅವರು ವಿದ್ಯಾರ್ಥಿಗಳಿಗೆ ಉಚಿತವಾಗಿ ಲಸಿಕೆ ವಿತರಣೆಗೆ ಕ್ರಮ ಕೈಗೊಂಡಿರುವುದು ಶ್ಲಾಘನೀಯ’ ಎಂದರು.