ಬೆಂಗಳೂರು: 'ದೇಶದಲ್ಲಿ ಆರೋಗ್ಯಕರ ಪ್ರಜಾಪ್ರಭುತ್ವ ವ್ಯವಸ್ಥೆ ಇಲ್ಲದೆ ಜನ ಸಾಮಾನ್ಯರ ಮನಸ್ಸಿನಲ್ಲಿ ನೋವಿದೆ. ಐದು ವರ್ಷಗಳಲ್ಲಿ ವಾಕ್ ಸ್ವಾತಂತ್ರ್ಯಕ್ಕೆ ದೊಡ್ಡ ಹೊಡೆತ ಬಿದ್ದಿದೆ' ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ ಅಭಿಪ್ರಾಯಪಟ್ಟರು.
ಪ್ರೆಸ್ಕ್ಲಬ್ನಲ್ಲಿ ಮಾಧ್ಯಮ ಮಾತು–ಮಂಥನ ಕಾರ್ಯಕ್ರಮದಲ್ಲಿ ಸೋಮವಾರ ಅವರು ಮಾತನಾಡಿದರು.
ದೇಶದ ಸೇನೆಯನ್ನು ಮೋದಿ ಸೇನೆ ಎನ್ನುತ್ತಾರೆ. ಸೇನೆಯ ಕಾರ್ಯವನ್ನು ಪಕ್ಷದ ಕಾರ್ಯಕ್ರಮ ಎಂದು ಬಿಂಬಿಸಲಾಗುತ್ತಿದೆ. ಸೈನ್ಯದ ವಿಚಾರಗಳನ್ನು ಬಿಜೆಪಿ ರಾಜಕೀಯಕ್ಕೆ ಬಳಕೆ ಮಾಡುತ್ತಿದೆ ಎಂದು ದೂರಿದರು.
ದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಚುನಾವಣಾ ಆಯೋಗ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೇಲೆ ಕ್ರಮ ಕೈಗೊಳ್ಳಬೇಕು. ಯೋಗಿ ಆದಿತ್ಯಾನಾಥ್ಗೆ ಬಹಿಷ್ಕಾರ ಹಾಕಬೇಕು. ಚುನಾವಣೆ ಆಯೋಗ ದಿಟ್ಟ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮೂಲಭೂತ ಹಕ್ಕುಗಳ ಮೇಲೆ ದಬ್ಬಾಳಿಕೆ ನಡೆದಿದೆ. ಚುನಾವಣೆ ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ನಡೆಯಬೇಕು. ಕಲ್ಯಾಣ್ ಸಿಂಗ್ ರಾಜ್ಯಪಾಲರಾಗಿ ಸಂವಿಧಾನಾತ್ಮಕ ಹುದ್ದೆಯಲ್ಲಿದ್ದಾರೆ. ಆದರೆ, ಅವರು ಬಿಜೆಪಿ ಪಕ್ಷದ ಕಾರ್ಯಕರ್ತ ಎಂದು ಹೇಳುತ್ತಾರೆ. ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಅಂತಾರೆ ಎಂದರು.
ಚುನಾವಣಾ ಆಯೋಗಕ್ಕೆ ದೂರು ನೀಡಿದರೆ, ಆಯೋಗ ರಾಷ್ಟ್ರಪತಿಗೆ ಪತ್ರ ಬರೆಯುತ್ತದೆ. ರಾಷ್ಟ್ರಪತಿಯವರು ಕೇಂದ್ರ ಗೃಹ ಮಂತ್ರಿಗೆ ತನಿಖೆಗೆ ನೀಡುತ್ತಾರೆ. ಸಂವಿಧಾನ ಕಾಪಾಡುವವರೇ ಹೀಗೆ ಮಾಡಿದರೆ ಹೇಗೆ ಎಂದೂ ಅವರು ಪ್ರಶ್ನಿಸಿದರು.