ನವದೆಹಲಿ: ಬೆಂಗಳೂರಿನ ‘ನಮ್ಮ ಮೆಟ್ರೊ’ಗೆ ಪೂರ್ಣಕಾಲಿಕ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಕ ಮಾಡಬೇಕು. ಈ ವಿಷಯದಲ್ಲಿ ಕೇಂದ್ರ ನಗರ ವ್ಯವಹಾರಗಳ ಸಚಿವ ಹರದೀಪ್ ಸಿಂಗ್ ಪುರಿ ಮಧ್ಯಪ್ರವೇಶಿಸಬೇಕು ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಒತ್ತಾಯಿಸಿದ್ದಾರೆ.
ಕೇಂದ್ರ ಸಚಿವರನ್ನು ಬುಧವಾರ ಇಲ್ಲಿ ಭೇಟಿ ಮಾಡಿದ ತೇಜಸ್ವಿ ಸೂರ್ಯ, ಈ ಸಂಬಂಧ ಮನವಿ ಸಲ್ಲಿಸಿದರು. ನಮ್ಮ ಮೆಟ್ರೊ ಕಾಮಗಾರಿಗಳ ಪರಿಶೀಲನೆಗಾಗಿ ಬೆಂಗಳೂರಿಗೆ ಬರುವಂತೆ ಸಚಿವರಿಗೆ ಮನವಿ ಮಾಡಿದರು.
ನಮ್ಮ ಮೆಟ್ರೊಗೆ ಅಂಜುಂ ಪರ್ವೇಜ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. ಅವರು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹೊಣೆಯನ್ನೂ ನಿಭಾಯಿಸುತ್ತಿದ್ದಾರೆ.
‘ಪೂರ್ಣಕಾಲಿಕ ವ್ಯವಸ್ಥಾಪಕ ನಿರ್ದೇಶಕರು ಇಲ್ಲದ ಕಾರಣಕ್ಕೆ ಮೆಟ್ರೊ ಕಾಮಗಾರಿಗಳು ವಿಳಂಬವಾಗುತ್ತಿವೆ’ ಎಂದು ಸಂಸದರು ದೂರಿದ್ದಾರೆ.