ಕೆ.ಆರ್.ಪುರ: ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಮಹದೇವಪುರ ಕ್ಷೇತ್ರದಲ್ಲಿ ಮುನ್ನಡೆ ತಂದುಕೊಡಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಲ್ಲೂರಹಳ್ಳಿ ನಾಗೇಶ್ ತಿಳಿಸಿದರು.
ಮಹದೇವಪುರ ಕ್ಷೇತ್ರದ ಮಾರತ್ತಹಳ್ಳಿ, ಬಿದರಹಳ್ಳಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
‘ನಿಷ್ಠಾವಂತ ಕಾರ್ಯಕರ್ತರು ಪಕ್ಷದ ಬೆನ್ನೆಲುಬಾಗಿದ್ದು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪತ್ತೆ ಪುಟಿದೇಳಲಿದೆ. ಮಹದೇವಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನದೇ ಆದ ನೆಲೆಹೊಂದಿದ್ದು, ಮುಂದಿನ ದಿನಗಳಲ್ಲಿ ಪಾರಮ್ಯ ಮತ್ತೆ ಸ್ಥಾಪಿಸಲಿದೆ’ ಎಂದರು.
ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಅಲೀ ಖಾನ್ ಮಾತನಾಡಿ, ಪಕ್ಷವನ್ನು ಸಂಘಟಿಸುವ ದೃಷ್ಟಿಯಿಂದ ಹಲವು ಸಭೆಗಳನ್ನು ನಡೆಸಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ನುಡಿದರು.
ಪಾಲಿಕೆ ಮಾಜಿ ಸದಸ್ಯ ಉದಯ್ ಕುಮಾರ್, ಮಾಜಿ ಸಚಿವ ನಾಗೇಶ್, ಕೆಪಿಸಿಸಿ ಸದಸ್ಯ ಜಯರಾಮರೆಡ್ಡಿ, ಮುಖಂಡರಾದ ಎಂಸಿಸಿ ರವಿ, ಗೊವಿಂದರಾಜು, ದೀಪಕ್ ರಾಜ್ ಇದ್ದರು.