ಬೆಂಗಳೂರು: ‘ಲಿಂಗತ್ವ ಅಲ್ಪಸಂಖ್ಯಾತರನ್ನು ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಹಾಗೂ ವಿಧಾನ ಪರಿಷತ್ಗೆ ಆಯ್ಕೆ ಮಾಡುವುದರ ಮೂಲಕ ರಾಜಕೀಯ ಪ್ರಾತಿನಿಧ್ಯ ನೀಡಬೇಕು’ ಎಂದು ಸಾಮಾಜಿಕ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಆಗ್ರಹಿಸಿದರು.
ಕರ್ನಾಟಕ ರಾಜ್ಯ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟ– ಕೋಯಲೀಷನ್ ಫಾರ್ ಕನ್ವರ್ಜೆನ್ಸ್ ಶನಿವಾರ ಆಯೋಜಿಸಿದ್ದ ‘ಲಿಂಗತ್ವ ಅಲ್ಪಸಂಖ್ಯಾತರ ರಾಜಕೀಯ ಪ್ರಾತಿನಿಧ್ಯ ರಾಜ್ಯಮಟ್ಟದ ಸಮ್ಮೇಳನ’ದಲ್ಲಿ ಅವರು ಮಾತನಾಡಿದರು.
‘ದೇಶದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಸಿಗಬೇಕಾದ ಮೂಲಭೂತ ಹಕ್ಕುಗಳು ಸಿಗುತ್ತಿಲ್ಲ. ಹೀಗಿದ್ದಾಗ ನಾವು ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಹೇಗೆ ಆಚರಿಸಬೇಕು. ಎಲ್ಲ ಸಮುದಾಯಗಳಿಗೆನೀಡಿದಂತೆ ಶೇಕಡಾವಾರು ರಾಜಕೀಯ ಪ್ರಾತಿನಿಧ್ಯವನ್ನು ನಮಗೂ ಒದಗಿಸಬೇಕು. ಸಮುದಾಯದ ಪ್ರತಿನಿಧಿಯೊಬ್ಬರು ಶಾಸನಸಭೆಗಳಲ್ಲಿದ್ದರೆ ನಮ್ಮವರ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಾರೆ’ ಎಂದರು.
ಲೇಖಕಿ ಕೆ. ಷರೀಫಾ, ‘ಲಿಂಗತ್ವ ಅಲ್ಪಸಂಖ್ಯಾತರ ಬದುಕು ಬೀದಿಗೆ ಬಂದಿದೆ. ಸರ್ಕಾರ ಅವರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಬೇಕು. ಇವರಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯಗಳನ್ನು ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.
‘ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಲಿಂಗತ್ವ ಅಲ್ಪಸಂಖ್ಯಾತರಿಗೆ ರಾಜಕೀಯ ಪ್ರಾತಿನಿಧ್ಯ ನೀಡುವ ಕುರಿತು ಚರ್ಚೆಯ ವಿಷಯವನ್ನಾಗಿ ಪರಿಗಣಿಸಬೇಕು. ವಿಧಾನ ಪರಿಷತ್ತಿನಲ್ಲಿ ಸಮುದಾಯದವರಿಗೆ ಅವಕಾಶ ಕಲ್ಪಿಸಿದ ಮೊದಲ ಪಕ್ಷ ಎಂಬ ಹೆಗ್ಗಳಿಕೆ ಕಾಂಗ್ರೆಸ್ ಸಲ್ಲಲಿ’ ಎಂದು ಒತ್ತಾಯಿಸಲಾಯಿತು.
‘ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಬದುಕು, ಹಕ್ಕುಗಳ ಕುರಿತು ಸರ್ಕಾರ ನಿರ್ಣಯಿಸುವಾಗ ಸಮುದಾಯದ ಪ್ರತಿನಿಧಿಗಳಿಗೂ ಅವಕಾಶ ಇರಬೇಕು. ಸಮುದಾಯವನ್ನು ಈಗ ದೇಶದ ಎಲ್ಲ ಪ್ರಜಾಸತ್ತಾತ್ಮಕ ಸಂಸ್ಥೆಗಳಿಂದ ಹೊರಗಿಟ್ಟುರುವುದು ಸರಿಯಲ್ಲ’ ಎಂಬ ಅಭಿಪ್ರಾಯ ವ್ಯಕ್ತವಾಯಿತು.