ಬೆಂಗಳೂರು: ಆಗ್ನೇಯ ವಿಭಾಗದ ಠಾಣೆಗಳ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿದ್ದ ಕಳವು, ಸುಲಿಗೆ ಸೇರಿದಂತೆ ಹಲವು ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು, 70 ಆರೋಪಿಗಳನ್ನು ಬಂಧಿಸಿದ್ದಾರೆ.
‘ಅಪರಾಧ ಕೃತ್ಯಗಳ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು. 55 ಪ್ರಕರಣಗಳ ಸಂಬಂಧ 70 ಮಂದಿಯನ್ನು ಸೆರೆ ಹಿಡಿಯಲಾಗಿದೆ’ ಎಂದು ವಿಭಾಗದ ಡಿಸಿಪಿ ಇಶಾ ಪಂತ್ ಹೇಳಿದರು.
‘1.72 ಕೆ.ಜಿ ಚಿನ್ನಾಭರಣ, 975 ಗ್ರಾಂ ಬೆಳ್ಳಿ ಸಾಮಗ್ರಿ, ₹10.88 ಲಕ್ಷ ನಗದು, 31 ಮೊಬೈಲ್ ಸೇರಿದಂತೆ ₹1.48 ಕೋಟಿ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.
‘ಡ್ರಗ್ಸ್ ಮಾಫಿಯಾ ವಿರುದ್ಧವೂ ಕಾರ್ಯಾಚರಣೆ ನಡೆಸಲಾಗುತ್ತಿದೆ. ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿದ್ದ ಪತಿಗೆ ಗಾಂಜಾ ಕೊಡಲು ಬಂದಿದ್ದ ಪತ್ನಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಳು. ಆಕೆಯನ್ನೂ ಬಂಧಿಸಿ ಗಾಂಜಾ ಜಪ್ತಿ ಮಾಡಲಾಗಿದೆ. ಅದು ಸೇರಿದಂತೆ ಹಲವು ಪ್ರಕರಣಗಳಲ್ಲಿ 66 ಕೆ.ಜಿ 250 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ’ ಎಂದು ಇಶಾ ತಿಳಿಸಿದರು.