ಬೆಂಗಳೂರು: ನಗರದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಎಂಬಿಎ ವಿದ್ಯಾರ್ಥಿ ಸೇರಿ ಇಬ್ಬರು ಮೃತಪಟ್ಟಿದ್ದಾರೆ.
ಚಿಕ್ಕಜಾಲ ಸಮೀಪದ ಗೋಪಾಲಪುರದಲ್ಲಿ ಬುಧವಾರ ರಾತ್ರಿ ಬೈಕ್ಗೆ ವಾಹನವೊಂದು ಗುದ್ದಿದ್ದರಿಂದ ಸವಾರ ಆಕಾಶ್ (24) ಎಂಬುವರು ಮೃತಪಟ್ಟಿದ್ದಾರೆ.
ಹುಬ್ಬಳ್ಳಿಯ ಆಕಾಶ್, ಬೈಲಹಳ್ಳಿಯ ಖಾಸಗಿ ಕಾಲೇಜೊಂದರಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದರು. ಕಾಲೇಜಿನ ವಿದ್ಯಾರ್ಥಿನಿಲಯದಲ್ಲಿ ಉಳಿದುಕೊಂಡಿದ್ದರು. ರಾತ್ರಿ 9.20 ಗಂಟೆ ಸುಮಾರಿಗೆ ಬೈಕ್ನಲ್ಲಿ ಹೊರಟಿದ್ದಾಗ ಈ ದುರ್ಘಟನೆ ಸಂಭವಿಸಿದೆ.
‘ಅಪಘಾತದಿಂದ ಗಾಯಗೊಂಡಿದ್ದ ಆಕಾಶ್, ರಸ್ತೆಯಲ್ಲಿ ನರಳುತ್ತ ಬಿದ್ದಿದ್ದರು. ಸ್ಥಳೀಯರೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದರು’ ಎಂದು ಚಿಕ್ಕಜಾಲ ಸಂಚಾರ ಪೊಲೀಸರು ತಿಳಿಸಿದರು.
‘ಅಪಘಾತದ ಬಳಿಕ ವಾಹನ ನಿಲ್ಲಿಸದೆ, ಅದರ ಚಾಲಕ ಪರಾರಿಯಾಗಿದ್ದಾನೆ. ಆತನ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ’ ಎಂದರು.
ಆಟೊ ಚಾಲಕ ಸಾವು: ಓಕಳಿಪುರದ ಆರ್.ಆರ್. ಕಲ್ಯಾಣ ಮಂಟಪ ಬಳಿ ರಸ್ತೆ ವಿಭಜಕಕ್ಕೆ ಆಟೊ ಗುದ್ದಿದ್ದರಿಂದ, ಅದರ ಚಾಲಕ ಮಂಜುನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನೆಲಮಂಗಲದ ನಿವಾಸಿ ಮಂಜುನಾಥ್, ನಿತ್ಯವೂ ಮೆಜೆಸ್ಟಿಕ್ನಿಂದ ನೆಲಮಂಗಲಕ್ಕೆ ಪತ್ರಿಕೆಗಳನ್ನು ತೆಗೆದುಕೊಂಡು ಹೋಗುತ್ತಿದ್ದರು. ಗುರುವಾರ ಬೆಳಿಗ್ಗೆ ಪತ್ರಿಕೆ ತೆಗೆದುಕೊಂಡು ಹೋಗುತ್ತಿರುವಾಗಲೇ ಈ ಘಟನೆ ನಡೆದಿದೆ.