ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿ ದಟ್ಟಣೆ ಕಾರಿಡಾರ್‌ ನಿರ್ವಹಣೆ ಹೆಸರಿನಲ್ಲಿ ಲೂಟಿ: ಕಾಂಗ್ರೆಸ್‌ ಆರೋಪ

Last Updated 3 ಡಿಸೆಂಬರ್ 2021, 9:42 IST
ಅಕ್ಷರ ಗಾತ್ರ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 12 ಅತಿ ದಟ್ಟಣೆಯ ಕಾರಿಡಾರ್‌ ರಸ್ತೆಗಳ ಅಭಿವೃದ್ಧಿ ಮತ್ತು ನಿರ್ವಹಣೆ ಹೆಸರಿನಲ್ಲಿ ಬಿಜೆಪಿ ಸರ್ಕಾರ ನೂರಾರು ಕೋಟಿ ರೂಪಾಯಿಗಳನ್ನು ಲೂಟಿ ಮಾಡುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ಮಾಜಿ ಮೇಯರ್‌ಗಳೊಂದಿಗೆ ಶುಕ್ರವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ‘₹ 335 ಕೋಟಿ ವೆಚ್ಚದಲ್ಲಿ 12 ಅತಿ ದಟ್ಟಣೆಯ ಕಾರಿಡಾರ್‌ಗಳನ್ನು ನಿರ್ಮಿಸುವ ಪ್ರಸ್ತಾವವಿದೆ. ಆದರೆ, ಈ ರಸ್ತೆಗಳ ನಿರ್ವಹಣೆಗೆ ವರ್ಷಕ್ಕೆ ₹ 150 ಕೋಟಿಯಂತೆ ಐದು ವರ್ಷಗಳ ಅವಧಿಯಲ್ಲಿ ₹ 785.31 ಕೋಟಿ ವೆಚ್ಚ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ. ಈ ಪ್ರಸ್ತಾವದ ಹಿಂದೆ ದೊಡ್ಡ ಅವ್ಯವಹಾರ ಇದೆ’ ಎಂದು ದೂರಿದರು.

ರಸ್ತೆ ನಿರ್ಮಿಸಿದ ಗುತ್ತಿಗೆದಾರರೇ ಕನಿಷ್ಠ ಎರಡು ವರ್ಷಗಳವರೆಗೆ ನಿರ್ವಹಣೆಯನ್ನೂ ಮಾಡಬೇಕೆನ್ನುವ ನೀತಿ ದೇಶದಲ್ಲಿ ಜಾರಿಯಲ್ಲಿದೆ. ಆದರೆ, ಬಿಬಿಎಂಪಿಯ 12 ಅತಿ ದಟ್ಟಣೆ ಕಾರಿಡಾರ್‌ಗಳ ವಿಚಾರದಲ್ಲಿ ಈ ನಿಯಮ ಅನ್ವಯವಾಗುತ್ತಿಲ್ಲ. ₹ 477.29 ಕೋಟಿ ವೆಚ್ಚದ ಕಾಮಗಾರಿಗಳಿಗೆ ಮಾತ್ರ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಆದರೆ, ₹ 882.30 ಕೋಟಿ ವೆಚ್ಚದ ಕಾಮಗಾರಿಗಳಿಗೆ ಟೆಂಡರ್‌ ಪ್ರಕ್ರಿಯೆ ಆರಂಭಿಸಲಾಗಿದೆ ಎಂದರು.

ಬಿಬಿಎಂಪಿ ವ್ಯಾಪ್ತಿಯಲ್ಲಿನ ರಸ್ತೆಗಳ ನಿರ್ಮಾಣ ಮತ್ತು ನಿರ್ವಹಣೆ ಕಾಮಗಾರಿಯನ್ನು ಪಾಲಿಕೆಯ ಬದಲಿಗೆ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮಕ್ಕೆ (ಕೆಆರ್‌ಡಿಸಿಎಲ್‌) ನೀಡಲಾಗಿದೆ. ಕಳಪೆ ಕಾಮಗಾರಿಯ ಕಾರಣಕ್ಕಾಗಿ ಕಪ್ಪು ಪಟ್ಟಿಗೆ ಸೇರಿಸಲು ಶಿಫಾರಸು ಮಾಡಿರುವ ಗುತ್ತಿಗೆದಾರರಿಗೆ ಈ ಕಾಮಗಾರಿಗಳನ್ನು ನೀಡಬೇಕೆಂಬ ಶಿಫಾರಸು ಮಾಡಲಾಗಿದೆ ಎಂದು ಆರೋಪಿಸಿದರು.

ಕೆಆರ್‌ಡಿಸಿಎಲ್‌ಗೆ ಪ್ರತಿ ವರ್ಷ ₹ 150 ಕೋಟಿ ನಿಡುವುದು ಸರಿಯಲ್ಲ. ಈ ರಸ್ತೆಗಳ ಅಭಿವೃದ್ಧಿ ಹೆಸರಿನಲ್ಲಿ ಪೋಲು ಮಾಡುತ್ತಿರುವ ₹ 335 ಕೋಟಿ ಅನುದಾನವನ್ನು ಬೆಂಗಳೂರಿನ ರಸ್ತೆಗಳ ಗುಂಡಿ ಮುಚ್ಚಲು ಬಳಸಬೇಕು ಎಂದು ಆಗ್ರಹಿಸಿದರು.

ಅವೈಜ್ಞಾನಿಕವಾಗಿ ವಾರ್ಡ್‌ ವಿಂಗಡಣೆ: ಬಿಬಿಎಂಪಿ ಆಡಳಿತ ನಿರ್ವಹಣೆಗಾಗಿ ರೂಪಿಸಿರುವ ಪ್ರತ್ಯೇಕ ಕಾಯ್ದೆಯ ಪ್ರಕಾರ, ಪಾಲಿಕೆಯ ವಾರ್ಡ್‌ಗಳ ಗರಿಷ್ಠ ಮಿತಿಯನ್ನು 243 ಕ್ಕೆ ಏರಿಕೆ ಮಾಡಲಾಗಿದೆ. ಈ ಉದ್ದೇಶಕ್ಕಾಗಿ ವಾರ್ಡ್‌ಗಳ ಪುನರ್ ವಿಂಗಡಣೆ ಆಯೋಗ ರಚಿಸಲಾಗಿದೆ.‌ ಬಿಜೆಪಿಗೆ ಅನುಕೂಲವಾಗುವ ರೀತಿಯಲ್ಲಿ ವಾರ್ಡ್‌ಗಳ ಪುನರ್‌ ವಿಂಗಡಣೆ ಪ್ರಕ್ರಿಯೆ ನಡೆಯುತ್ತಿದೆ ಎಂದು ದೂರಿದರು.

ಬೆಂಗಳೂರು ನಗರದ ಉಸ್ತುವಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿಯಲ್ಲೇ ಇದೆ. ನಗರದ ಅಭಿವೃದ್ಧಿ ಕುರಿತು ಚರ್ಚಿಸಲು ಮುಖ್ಯಮಂತ್ರಿಯವರು ಈವರೆಗೂ ಸಮಯ ಮೀಸಲಿಟ್ಟಿಲ್ಲ. ಎರಡು ಬಾರಿ ನಗರ ಪ್ರದಕ್ಷಿಣೆ ನಡೆಸಿರುವುದರ ಹೊರತಾಗಿ ಯಾವುದೇ ಕ್ರಮ ಕೈಗೊಂಡಿಲ್ಲ. ಅವರಿಗೆ ಸಾಧ್ಯವಾಗದೇ ಇದ್ದರೆ ಬೆಂಗಳೂರು ನಗರದ ಉಸ್ತುವಾರಿಗೆ ಬೇರೊಬ್ಬ ಸಚಿವರನ್ನು ನಿಯೋಜಿಸಲಿ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT