ಬೆಂಗಳೂರು: ಸಾರಿಗೆ ನೌಕರರ ಮುಷ್ಕರ 6 ದಿನಗಳಿಂದ ನಡೆಯುತ್ತಿದ್ದರೂ ಸರ್ಕಾರ ಮಾತುಕತೆಗೆ ಆಹ್ವಾನಿಸದೆ ಹಠಮಾರಿ ಧೋರಣೆ ಅನುಸರಿಸುತ್ತಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್(ಸಿಐಟಿಯು) ಅಸಮಾಧಾನ ವ್ಯಕ್ತಪಡಿಸಿದೆ.
ಕಾರ್ಮಿಕ ಕಾಯ್ದೆಯ ಸೆಕ್ಷನ್ 10(ಬಿ) ಅಡಿಯಲ್ಲಿ ಹೋರಾಟ ನಡೆಸುತ್ತಿರುವ ಕಾರ್ಮಿಕರ ಸೇವಾ ನಿಯಮಗಳಿಗೆ ರಕ್ಷಣೆ ನೀಡಬೇಕಿದ್ದ ಸರ್ಕಾರ, ತನ್ನ ಕರ್ತವ್ಯ ಕಡೆಗಣಿಸಿದೆ. ಕಾರ್ಮಿಕರ ಮೇಲೆ ದಮನಕಾರಿ ನೀತಿಗಳನ್ನು ಹರಿಬಿಟ್ಟಿದೆ. ಇದರಿಂದ ಸಾಮಾನ್ಯ ಜನರಿಗೆ ತೊಂದರೆ ಆಗಲಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿಯ ಮೇಲೂ ಇದು ಪರಿಣಾಮ ಬೀರಲಿದೆ ಎಂದು ಫೆಡರೇಷನ್ ಅಧ್ಯಕ್ಷ ಎಚ್.ಡಿ.ರೇವಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಮಂಜುನಾಥ್ ಅವರು ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ವಸತಿ ಗೃಹಗಳಿಂದ ತೆರವು, ವರ್ಗಾವಣೆ, ಅಮಾನತು, ವಜಾ ಮಾಡುವ ಮೂಲಕ ಕಾರ್ಮಕರನ್ನು ಬಲಿಪಶು ಮಾಡಲಾಗುತ್ತಿದೆ. ಸರ್ಕಾರ ಈ ದಮನಕಾರಿ ನೀತಿಗಳನ್ನು ಕೈಬಿಟ್ಟು ಮಾತುಕತೆಗೆ ಕಾರ್ಮಿಕ ಸಂಘಟನೆಗಳನ್ನು ಆಹ್ವಾನಿಸಬೇಕು. ಮಾರ್ಚ್ ತಿಂಗಳ ವೇತನವನ್ನು ಎಲ್ಲ ನೌಕರರಿಗೂ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.