ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ರೋಗಿಗಳಿಗೆ ತುರ್ತು ಸಂದರ್ಭದಲ್ಲಿ ಒದಗಿಸುವುದಕ್ಕಾಗಿ 15,000 ಆಮ್ಲಜನಕ ಸಾಂದ್ರಕ (ಕಾನ್ಸಂಟ್ರೇಟರ್) ಖರೀದಿಸಲಾಗುವುದು ಎಂದು ಕೋವಿಡ್ ಕಾರ್ಯಪಡೆಯ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.
ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮನೆ ಬಾಗಿಲಿಗೆ ಆಮ್ಲಜನಕ ಸಾಂದ್ರಕ ಒದಗಿಸುವ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಿ ಮಾತನಾಡಿದ ಅವರು, ‘5,000 ಉಪಕರಣಗಳನ್ನು ದಾಸ್ತಾನು ಹೊಂದಿರುವವರಿಂದ ತಕ್ಷಣದಲ್ಲೇ ಖರೀದಿಸಲಾಗುವುದು. ಉಳಿದ 10,000 ಸಾಧನಗಳ ಖರೀದಿಗೆ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗುವುದು’ ಎಂದರು.
ಔಷಧಿ ತಯಾರಿಕಾ ಕಂಪನಿಗಳು ರಾಜ್ಯಕ್ಕೆ ನಿಗದಿತ ಪ್ರಮಾಣದ ರೆಮ್ಡಿಸಿವಿರ್ ಚುಚ್ಚುಮದ್ದು ಪೂರೈಸುತ್ತಿಲ್ಲ. ಅಂತಹ ಕಂಪನಿಗಳಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.
90 ಆಮ್ಲಜನಕ ಸಾಂದ್ರಕಗಳನ್ನು ರಾಮಾನುಜ ಜಿಯರ್ ಸ್ವಾಮೀಜಿ ಸೇವೆಗೆ ಮುಕ್ತಗೊಳಿಸಿದರು. 70 ಆಮ್ಲಜನಕ ಸಾಂದ್ರಕಗಳನ್ನು ಮಲ್ಲೇಶ್ವರ ಕ್ಷೇತ್ರದ ವ್ಯಾಪ್ತಿಯಲ್ಲಿ ಬಳಸಲಾಗುತ್ತದೆ. 20 ಸಾಂದ್ರಕಗಳನ್ನು ಕೋಲಾರ ಜಿಲ್ಲೆಯಲ್ಲಿ ಬಳಸುವುದಕ್ಕಾಗಿ ಅಲ್ಲಿನ ಸಂಸದ ಮುನಿಸ್ವಾಮಿ ಅವರಿಗೆ ಹಸ್ತಾಂತರಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.