ಹಂಪಿ ಕನ್ನಡ ವಿವಿ ಸಮಸ್ಯೆ ಶೀಘ್ರ ಇತ್ಯರ್ಥ: ಸಚಿವ ಅಶ್ವತ್ಥನಾರಾಯಣ ಭರವಸೆ

ಬೆಂಗಳೂರು: ‘ಹಂಪಿ ಕನ್ನಡ ವಿಶ್ವವಿದ್ಯಾಲಯವು ಎದುರಿಸುತ್ತಿರುವ ಸಮಸ್ಯೆಯನ್ನು ಬಗೆಹರಿಸಲು ಶೀಘ್ರವೇ ಕ್ರಮ ಕೈಗೊಳ್ಳಲಿದ್ದೇವೆ’ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎಚ್.ಅಶ್ವತ್ಥನಾರಾಯಣ ಭರವಸೆ ನೀಡಿದರು.
ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡರ ನೇತೃತ್ವದ ನಿಯೋಗವು ಸಚಿವರನ್ನು ಶನಿವಾರ ಭೇಟಿ ಮಾಡಿ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿತು.
ನಿಯೋಗದಲ್ಲಿದ್ದ ಪ್ರಮುಖರ ಜೊತೆ ಮಾತನಾಡಿದ ಸಚಿವರು, ‘ಕೋವಿಡ್ ಕಾರಣದಿಂದ ಅನುದಾನ ಬಿಡುಗಡೆ ವಿಳಂಬವಾಗಿದೆ. ಪ್ರಸಾರಾಂಗದ ಚಟುವಟಿಕೆಗಳು ಸ್ಥಗಿತಗೊಂಡಿದ್ದರಿಂದ ವಿಶ್ವವಿದ್ಯಾಲಯಕ್ಕೆ ವರಮಾನ ಇಲ್ಲದಂತಾಗಿದೆ. ಶೀಘ್ರವೇ ಅನುದಾನ ಬಿಡುಗಡೆ ಮಾಡಲಿದ್ದೇವೆ’ ಎಂದರು.
ಕನ್ನಡ ವಿಶ್ವವಿದ್ಯಾಲಯವನ್ನು ಉಳಿಸುವಂತೆ ಒತ್ತಾಯಿಸಿ ಕರವೇ ಶುಕ್ರವಾರ ಹಮ್ಮಿಕೊಂಡಿದ್ದ ಟ್ವಿಟರ್ ಅಭಿಯಾನದ ಕುರಿತು ಉಲ್ಲೇಖಿಸಿದ ಸಚಿವರು, ‘ಕನ್ನಡಿಗರ ಅಹವಾಲುಗಳನ್ನು ಗಮನಿಸಿದ್ದೇನೆ. ಕನ್ನಡ ನಾಡು, ನುಡಿ ಹಿತಾಸಕ್ತಿ ರಕ್ಷಣೆಗೆ ಸರ್ಕಾರ ಬದ್ಧ’ ಎಂದರು.
‘ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ₹ 6 ಕೋಟಿಯನ್ನು ಕೂಡಲೇ ಬಿಡುಗಡೆ ಮಾಡಬೇಕು. ಸಿಬ್ಬಂದಿಯ ಬಾಕಿ ವೇತನಗಳನ್ನು ಪಾವತಿಸಬೇಕು. ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಫೆಲೋಶಿಪ್ ನೀಡಬೇಕು, ಸ್ಥಗಿತಗೊಂಡಿರುವ ಎಲ್ಲ ಕೋರ್ಸ್ಗಳ ಪುನರಾರಂಭಕ್ಕೆ ಕ್ರಮಕೈಗೊಳ್ಳಬೇಕು. ಪ್ರವೇಶಾತಿ ಪ್ರಾರಂಭಿಸಬೇಕು’ ಎಂದು ನಿಯೋಗವು ಸಚಿವರಲ್ಲಿ ಒತ್ತಾಯಿಸಿತು.
‘ಕನ್ನಡ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಬೇಕು, ದೂರಶಿಕ್ಷಣ ಕೋರ್ಸ್ಗಳನ್ನು ಪುನರಾರಂಭಿಸಬೇಕು. ವಿಶ್ವವಿದ್ಯಾಲಯದ ಆಡಳಿತ ಯಂತ್ರ ಚುರುಕುಗೊಳಿಸಬೇಕು’ ಎಂದೂ ಮನವಿ ಮಾಡಿತು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.