ಬೆಂಗಳೂರು: ಇಲ್ಲಿನ ಗುರುರಾಘವೇಂದ್ರ ಸಹಕಾರಿ ಬ್ಯಾಂಕ್ನಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅವ್ಯವಹಾರದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸುವ ಸಾಧ್ಯತೆ ಇದೆ.
ವಿವಿಧ ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ನಡೆದಿರುವ ಹಣ ಅಕ್ರಮ ಕುರಿತು ಈಗಾಗಲೇ ಸಿಐಡಿ ತನಿಖೆ ನಡೆಯುತ್ತಿದ್ದು, ಗುರುರಾಘವೇಂದ್ರ ಬ್ಯಾಂಕ್ನಲ್ಲಿ ಹಗರಣವನ್ನೂ ಸಿಐಡಿಗೆ ವರ್ಗಾಯಿಸಲು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಆಸಕ್ತಿ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣವನ್ನು ಸಿಐಡಿಗೆ ಕೊಡುವಂತೆ ಡಿಜಿ ಮತ್ತು ಐಜಿ ಪ್ರವೀಣ್ ಸೂದ್ ಅವರಿಗೆ ಶಿಫಾರಸು ಮಾಡಲು ಅಗತ್ಯ ದಾಖಲೆ ಸಿದ್ಧಪಡಿಸುವಂತೆ ಅಧೀನ ಅಧಿಕಾರಿಗಳಿಗೆ ಪೊಲೀಸ್ ಕಮಿಷನರ್ ಸೂಚಿಸಿದ್ದಾರೆ. ಭಾಸ್ಕರ್ ರಾವ್ ಮಾಡಲಿರುವ ಶಿಫಾರಸು ಆಧರಿಸಿ ಡಿಜಿಪಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದೂ ಮೂಲಗಳು ವಿವರಿಸಿವೆ.
ಬ್ಯಾಂಕ್ ಅವ್ಯವಹಾರ ಕುರಿತು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನು ಆಧರಿಸಿ ಜಾರಿ ನಿರ್ದೇಶನಾಲಯವೂ ತನಿಖೆ ಕೈಗೆತ್ತಿಕೊಂಡಿದೆ. ಬ್ಯಾಂಕ್ ಆಡಳಿತ ಮಂಡಳಿಯನ್ನು ಸೂಪರ್ಸೀಡ್ ಮಾಡಿರುವ ಸಹಕಾರ ಸಂಘಗಳ ರಿಜಿಸ್ಟ್ರಾರ್ ಪ್ರಸನ್ನ ಕುಮಾರ್ ಅವರು ಆಡಳಿತಾಧಿಕಾರಿಯನ್ನು ನೇಮಕ ಮಾಡಿದ್ದಾರೆ.