ಬೆಂಗಳೂರು: ‘ರಾಜ್ಯ ಸರ್ಕಾರದ ಗ್ಯಾರಂಟಿಗಳ ಕುರಿತು ವಿರೋಧ ಪಕ್ಷದವರು ಮಾತನಾಡಬಾರದು ಎನ್ನುವುದಾದರೆ ಕರ್ನಾಟಕ ರಾಜ್ಯ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಿಪಬ್ಲಿಕ್ (ಗಣರಾಜ್ಯ) ಆಗಿ ಬದಲಾಗಿದೆಯೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
‘ಗ್ಯಾರಂಟಿಗಳಿಗೂ ಕುಮಾರಸ್ವಾಮಿಗೂ ಏನು ಸಂಬಂಧ’ ಎಂದು ಶಿವಕುಮಾರ್ ಪ್ರಶ್ನಿಸಿರುವ ಕುರಿತು ‘ಎಕ್ಸ್’ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ‘ಅಧಿಕಾರದ ಪಿತ್ತ ನೆತ್ತಿಗೇರಿ ಮಿದುಳು ಕೆಲಸ ಮಾಡದಿದ್ದರೆ ನಾಲಿಗೆ ಹೀಗೆ ಮಾತನಾಡುತ್ತದೆ. ಇದರಲ್ಲಿ ಅಚ್ಚರಿಯೇನೂ ಇಲ್ಲ’ ಎಂದಿದ್ದಾರೆ.
‘ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ, ಪ್ರತಿಪಕ್ಷ ಎರಡೂ ಇರುತ್ತವೆ. ಇದು ಗೊತ್ತಿಲ್ಲದಷ್ಟು ಅಜ್ಞಾನವೆ? ಪ್ರಶ್ನೆ ಮಾಡುವುದಕ್ಕಾಗಿಯೇ ಜನರು ನನ್ನನ್ನು ವಿರೋಧ ಪಕ್ಷದಲ್ಲಿ ಕೂರಿಸಿದ್ದಾರೆ. ಸ್ವಲ್ಪ ಸಮಯದ ನಂತರ ತಿರುಗುವ ತಲೆ ತಾನಾಗಿಯೇ ನಿಲ್ಲುತ್ತದೆ’ ಎಂದು ಕುಟುಕಿದ್ದಾರೆ.
‘ಚುನಾವಣೆ ಗೆಲ್ಲಬೇಕಾದರೆ ಇಂತಹ ಅಗ್ಗದ ಗಿಮಿಕ್ಗಳನ್ನು ಮಾಡಲೇಬೇಕಾಗುತ್ತದೆ ಎಂದು ಸಚಿವರೊಬ್ಬರು ಹೇಳಿದ್ದರು. ಉಪ ಮುಖ್ಯಮಂತ್ರಿಯವರ ಸಂಪುಟ ಸಹೋದ್ಯೋಗಿ ಹೇಳಿದ್ದನ್ನೇ ನಾನು ಹೇಳಿದ್ದೇನೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಲಿ’ ಎಂದು ಆಗ್ರಹಿಸಿದ್ದಾರೆ.