ಯಲಹಂಕ: ಹೆಸರಘಟ್ಟ ಹೋಬಳಿ ಹನಿಯೂರು ಗ್ರಾಮದಲ್ಲಿ ಫೆಬ್ರುವರಿ 20ರಂದು (ಶನಿವಾರ) ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ನೇತೃತ್ವದಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಕೆ.ನರಸಿಂಹಮೂರ್ತಿ ತಿಳಿಸಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು, ಗ್ರಾಮದ ಕುಂದುಕೊರತೆಗಳ ಬಗ್ಗೆ ಪರಿಶೀಲಿಸಲು ಮತ್ತು ಸರ್ಕಾರದ ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ತಿಳಿಸುವುದು ಕಾರ್ಯಕ್ರಮದ ಉದ್ದೇಶ. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ ಎಂದರು.
ಗ್ರಾಮದಲ್ಲಿ ಸಸಿನೆಡುವುದರ ಜೊತೆಗೆ ಕೆರೆ, ಸ್ಮಶಾನ ಮತ್ತು ಗುಂಡುತೋಪು ಒತ್ತುವರಿ ತೆರವು ಹಾಗೂ ಕೆರೆ ಹೂಳುತೆಗೆಯುವ ಕಾರ್ಯಾಚರಣೆ ನಡೆಸಲಾಗುವುದು. ಅಲ್ಲದೆ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.