ಬೆಂಗಳೂರು: ನಾಗರಹೊಳೆ ಅರಣ್ಯವಾಸಿಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಆಗುತ್ತಿರುವ ಕಿರುಕುಳ ತಪ್ಪಿಸುವಂತೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ನಿರ್ದೇಶನ ನೀಡಿದ್ದಾರೆ.
ಗುರುವಾರ ತಮ್ಮನ್ನು ಭೇಟಿ ಮಾಡಿದ ಜೇನು ಕುರುಬ ಸಮುದಾಯದ ಸುಶೀಲಾ ಮತ್ತು ಶಿವು ಅವರು ಅರಣ್ಯಾಧಿಕಾರಿಗಳಿಂದ ಆಗುತ್ತಿರುವ ಕಿರುಕುಳದ ಬಗ್ಗೆ ವಿವರಿಸಿದರು.
ಯಾರ ರಕ್ಷಣೆಯೂ ಇಲ್ಲದೇ, ಅತ್ಯಂತ ದಯನೀಯ ಪರಿಸ್ಥಿತಿಯಲ್ಲಿ ಬದುಕು ಕಟ್ಟಿ ಕೊಂಡಿರುವ ಅರಣ್ಯವಾಸಿಗಳಿಗೆ ಎಲ್ಲ ರೀತಿಯ ರಕ್ಷಣೆ ಒದಗಿಸಬೇಕು ಎಂದು ಜ್ಞಾನೇಂದ್ರ ಸೂಚನೆ ನೀಡಿದರು.
‘ಸದ್ಯವೇ ನಾಗರಹೊಳೆ ಪ್ರದೇಶಕ್ಕೆ ಭೇಟಿ ನೀಡಿ, ಅರಣ್ಯವಾಸಿಗಳಿಂದ ಅಹವಾಲುಗಳನ್ನು ಸ್ವೀಕರಿಸುತ್ತೇನೆ’ ಎಂದು ಅವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಶಾಂತರಾಮ್ ಸಿದ್ದಿ ಅವರು ಇದ್ದರು.