ಬೆಂಗಳೂರು: ಬಿಬಿಎಂಪಿ ವಾರ್ಡುಗಳ ಮರು ವಿಂಗಡಣೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದು, ‘ತಮಗೆ ಅನುಕೂಲ ಆಗುವ ರೀತಿಯಲ್ಲಿ ವಾರ್ಡುಗಳ ವಿಂಗಡಣೆ ಮಾಡಿ ಬಿಜೆಪಿ ಅಧಿಕಾರ ವಿಕೃತಿ ಮೆರೆಯುತ್ತಿದೆ’ಎಂದು ಹೇಳಿದ್ದಾರೆ.
ಈ ಬಗ್ಗೆ ಶನಿವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಪಾಲಿಕೆಯಾಗಿದ್ದನ್ನುನಗರದ ಜನರಿಗೆ ಸ್ಥಳೀಯವಾಗಿ ಅತ್ಯುತ್ತಮ ಅಡಳಿತ, ಸೇವೆಗಳು ಲಭ್ಯವಾಗಲಿ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನಾಗಿ ಮಾಡಿದ್ದುನಾನು. ಆದರೆ, ಬಿಜೆಪಿ ಸರಕಾರವು ಬಿಬಿಎಂಪಿ ರಚನೆಯ ಮೂಲ ಆಶಯವನ್ನೇ ಬುಡಮೇಲು ಮಾಡಿ ರಾಜಕೀಯ ಸ್ವಾರ್ಥ ಸಾಧನೆಯ ಷಡ್ಯಂತ್ರ ನಡೆಸಿದೆ’ ಎಂದು ಆರೋಪಿಸಿದ್ದಾರೆ.
ಪಾಲಿಕೆಯಾಗಿದ್ದನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನಾಗಿ ನಾನು ಮಾಡಿದ್ದು ನಗರದ ಜನರಿಗೆ ಸ್ಥಳೀಯವಾಗಿ ಅತ್ಯುತ್ತಮ ಅಡಳಿತ, ಸೇವೆಗಳು ಲಭ್ಯವಾಗಲಿ ಎಂದು. ಆದರೆ, ಬಿಜೆಪಿ ಸರಕಾರವು ಬಿಬಿಎಂಪಿ ರಚನೆಯ ಮೂಲ ಆಶಯವನ್ನೇ ಬುಡಮೇಲು ಮಾಡಿ ರಾಜಕೀಯ ಸ್ವಾರ್ಥ ಸಾಧನೆಯ ಷಡ್ಯಂತ್ರ ನಡೆಸಿದೆ.1/8
— H D Kumaraswamy (@hd_kumaraswamy) June 25, 2022
‘ಬಿಜೆಪಿ ಅಧಿಕಾರ ಪಿಪಾಸು. ಅನ್ಯಪಕ್ಷ ಅಧಿಕಾರದಲ್ಲಿರುವುದು ಆ ಪಕ್ಷಕ್ಕೆ ಅಪಥ್ಯ. ತನ್ನ ಕೆಟ್ಟ ಆಡಳಿತಕ್ಕೆ ಬೇಸತ್ತು ಬೆಂಗಳೂರಿಗರು ಬೇರೆ ಪಕ್ಷಕ್ಕೆ ಎಲ್ಲಿ ಮತ ಹಾಕಿಬಿಟ್ಟಾರೋ ಎನ್ನುವ ಭೀತಿಯಿಂದ ಚುನಾವಣೆಯನ್ನೇ ನಡೆಸಲಿಲ್ಲ. ಕೋರ್ಟ್ ಚಾಟಿ ಬೀಸಿದ ಮೇಲೆ ಚುನಾವಣೆ ಎನ್ನುತ್ತಿರುವ ಸರಕಾರ, ಈಗ ವಾರ್ಡ್ ವಿಂಗಡಣೆಯ ನಾಟಕ ಅಡುತ್ತದೆ’ ಎಂದು ಹೇಳಿದ್ದಾರೆ.
‘ಕೋರ್ಟ್ ಹೇಳಿದರಷ್ಟೇ ಕೆಲಸʼ ಎನ್ನುವ ಚಾಳಿ ಬಿಜೆಪಿ ಸರಕಾರದ್ದು. ನ್ಯಾಯಾಲಯದ ಅದೇಶವನ್ನೇ ಧಿಕ್ಕರಿಸಿ ನಡೆದ ಈ ನಿರ್ಲಜ್ಜ ಸರಕಾರಕ್ಕೆ ಜನಹಿತಕ್ಕಿಂತ ಪಕ್ಷಹಿತವೇ ಸರ್ವಸ್ವ. ವಾರ್ಡ್ ವಿಂಗಡಣೆ ಸ್ವರೂಪ ನೋಡಿದರೆ ಬಿಜೆಪಿಯ 'ಅಧಿಕಾರದ ವಿಕೃತಿ' ಯಾವ ಮಟ್ಟದಲ್ಲಿದೆ ಎನ್ನುವುದು ಅರ್ಥವಾಗುತ್ತದೆ’ ಎಂದಿದ್ದಾರೆ.
‘ವಾರ್ಡ್ ವಿಂಗಡಣೆಯಲ್ಲಿ ಬೆಂಗಳೂರು ನಗರದ ಸಮಗ್ರತೆ, ಅನನ್ಯತೆಯನ್ನು ಕಡೆಗಣಿಸಲಾಗಿದೆ. ಬೆಂಗಳೂರು ಎಂದರೆ ಬಿಜೆಪಿ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳು ಮಾತ್ರವಲ್ಲ. ಇದು ಕೇವಲ ಬಿಜೆಪಿಯಿಂದ, ಬಿಜೆಪಿ ಶಾಸಕರಿಗಾಗಿ, ಬಿಜೆಪಿಯೇ ಮಾಡಿಕೊಂಡ ಮರು ವಿಂಗಡಣೆ’ ಎಂದು ಎಚ್.ಡಿ.ಕೆಹೇಳಿದ್ದಾರೆ.
ಐತಿಹಾಸಿಕ ವಾರ್ಡುಗಳ ಹೆಸರುಗಳನ್ನು ಬದಲಿಸಿ ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರಿನ ಚರಿತ್ರೆಯ ಕುರುಹುಗಳನ್ನು ಅಳಿಸಿ ಹಾಕಿ ಪಠ್ಯಕ್ಕೆ ಅಪಚಾರ ಎಸಗಿದಂತೆ ನಾಡಪ್ರಭುಗಳು ಮತ್ತು ಮೈಸೂರು ಒಡೆಯರರ ಘನ ಕೀರ್ತಿಗೆ ಚ್ಯುತಿ ತರುವ ಹುನ್ನಾರ ಇದಷ್ಟೇ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.