ಬೆಂಗಳೂರು: ‘ಕೊರೊನಾ ಸೋಂಕು ಹೆಚ್ಚಾಗಿರುವ ರಾಜ್ಯಗಳಿಂದ ಇಲ್ಲಿಗೆ ಬರುವವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸುವುದರಿಂದ ಎರಡನೇ ಹಂತದಲ್ಲಿ ಹೆಚ್ಚಾಗಬಹುದಾದ ಸೋಂಕಿನ ಪ್ರಮಾಣವನ್ನು ನಿಯಂತ್ರಿಸಬಹುದು’ ಎಂದು ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು.
ಗೋರಗುಂಟೆ ಪಾಳ್ಯದ ಪೀಪಲ್ ಟ್ರೀ ಆಸ್ಪತ್ರೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ಕ್ಯಾಥ್ ಲ್ಯಾಬ್’ಅತ್ಯಾಧುನಿಕ ಹೃದಯ ಚಿಕಿತ್ಸಾ ಕೇಂದ್ರದ ಉದ್ಘಾಟನೆ ಹಾಗೂ ಹೃದಯ ಚಿಕಿತ್ಸೆಗೆ ರಿಯಾಯಿತಿ ದರದ ಕಾರ್ಡ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
‘ಕೇರಳ ಹೊರತು ಪಡಿಸಿದರೆ ಬೇರೆ ರಾಜ್ಯಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ರಾಜ್ಯದಲ್ಲಿ ಎರಡನೇ ಅಲೆ ಬರಬಹುದು ಎಂಬ ಆತಂಕವಿದೆ. ಹಾಗಾಗಿ, ವಿದೇಶಗಳು ಹಾಗೂ ಹೊರರಾಜ್ಯಗಳಿಂದ ಬರುವವರಿಗೆ ಆರ್ಟಿಪಿಸಿಆರ್ ಪರೀಕ್ಷೆ ನಡೆಸುವುದು ಸೂಕ್ತ’ ಎಂದು ಸಲಹೆ ನೀಡಿದರು