ಬೆಂಗಳೂರು: ಪ್ರಶ್ನೆ ಪತ್ರಿಕೆಗಳ ಸೋರಿಕೆ ಕಾರಣದಿಂದ ಕೇಂದ್ರ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್ಇ) 10ನೇ ತರಗತಿಯ ಗಣಿತ ಮತ್ತು 12ನೇ ತರಗತಿಯ ಅರ್ಥಶಾಸ್ತ್ರ ವಿಷಯದ ಪರೀಕ್ಷೆಗಳನ್ನು ಮತ್ತೊಮ್ಮೆ ನಡೆಸಲು ನಿರ್ಧರಿಸಿದೆ.
ದೇಶದಾದ್ಯಂತ ಬುಧವಾರ ನಡೆದ 10ನೇ ತರಗತಿಯ ಗಣಿತ ಮತ್ತು ಮಾರ್ಚ್ 26ರಂದು ನಡೆದಿದ್ದ 12ನೇ ತರಗತಿಯ ಅರ್ಥಶಾಸ್ತ್ರ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು ಎಂಬ ವರದಿಗಳ ಹಿನ್ನೆಲೆಯಲ್ಲಿ ಮಂಡಳಿ ಈ ಕ್ರಮ ತೆಗೆದುಕೊಂಡಿದೆ.
‘ಪರೀಕ್ಷೆಯ ಪಾವಿತ್ರ್ಯ ಕಾಪಾಡುವ ಮತ್ತು ವಿದ್ಯಾರ್ಥಿಗಳ ಹಿತ ಕಾಯುವ ಉದ್ದೇಶದಿಂದ ಮಂಡಳಿ ಈ ಎರಡೂ ವಿಷಯಗಳಲ್ಲಿ ಮರು ಪರೀಕ್ಷೆ ನಡೆಸಲು ನಿರ್ಧರಿಸಿದೆ. ಮರು ಪರೀಕ್ಷೆಯ ದಿನಾಂಕ ಮತ್ತು ಇತರ ಮಾಹಿತಿಯನ್ನು ವಾರದೊಳಗೆ ವೆಬ್ಸೈಟ್ನಲ್ಲಿ ಪ್ರಕಟಿಸುವುದಾಗಿ’ ಸಿಬಿಎಸ್ಇ ಪ್ರಕಟಣೆಯಲ್ಲಿ ತಿಳಿಸಿದೆ.