ಬೆಂಗಳೂರು: ‘ಮಾನಸಿಕ ಆರೋಗ್ಯ ಪಾಲನೆ ಕಾಯ್ದೆ-2017ರ ಪರಿಣಾಮಕಾರಿ ಅನುಷ್ಠಾನದ ದೃಷ್ಟಿಯಿಂದ ಶೀಘ್ರವೇ ಅಧಿಕಾರೇತರ ಸದಸ್ಯರನ್ನು ನೇಮಕ ಮಾಡಿ, ಸಭೆಗಳನ್ನು ನಡೆಸಿ’ ಎಂದು ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
‘ರಾಜ್ಯದಲ್ಲಿ ಮಾನಸಿಕ ಆರೋಗ್ಯ ಪಾಲನೆ ಕಾಯ್ದೆ-2017 ಅನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ಎನ್. ಸಂಜಯ್ ಸೇರಿದಂತೆ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
‘ಕಾಯ್ದೆಯ ಅನುಷ್ಠಾನಕ್ಕೆ ಪೂರ್ಣ ಪ್ರಮಾಣದ ಪ್ರಾಧಿಕಾರ ರಚನೆ ಅಗತ್ಯ. ಆದ್ದರಿಂದ ಅಧಿಕಾರೇತರ ಸದಸ್ಯರನ್ನು ಶೀಘ್ರವೇ ನೇಮಕ ಮಾಡಿ, ಸಭೆಗಳನ್ನು ನಡೆಸಿ ಕಾಯ್ದೆಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ಅಂತೆಯೇ, ಮಾನಸಿಕ ಆರೋಗ್ಯ ಪರಿಶೀಲನಾ ಮಂಡಳಿಗಳನ್ನೂ ರಚಿಸಬೇಕು’ ಎಂದು ನ್ಯಾಯಪೀಠ ನಿರ್ದೇಶಿಸಿತು.
ಇದೇ ವೇಳೆ ಸರ್ಕಾರದ ಪರ ವಕೀಲರು, ‘ಮಾನಸಿಕ ಆರೋಗ್ಯ ನಿಧಿಗೆ ₹ 1.5 ಕೋಟಿ ಬಿಡುಗಡೆ ಮಾಡಲಾಗಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಮಾನಸಿಕ ಆರೋಗ್ಯ ಪಾಲನೆ ಕಾಯ್ದೆಯಡಿ ರಾಜ್ಯ ಸರ್ಕಾರವು ರೂಪಿಸಿರುವ ನಿಯಮಗಳಿಗೆ ಒಂದು ತಿಂಗಳಲ್ಲಿ ಅನುಮೋದನೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಏಪ್ರಿಲ್ 2ಕ್ಕೆ ಮುಂದೂಡಿದೆ.