ಬೆಂಗಳೂರು: ‘ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಎಸ್ಸಿ–ಎಸ್ಟಿ) ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗುತ್ತಿರುವ ಸುಳ್ಳು ಕ್ರಿಮಿನಲ್ ಪ್ರಕರಣಗಳು ನ್ಯಾಯಾಂಗ ವ್ಯವಸ್ಥೆಗೆ ಅಡ್ಡಿ ಉಂಟು ಮಾಡುತ್ತಿವೆ‘ ಎಂದು ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.
ಎಸ್ಸಿ–ಎಸ್ಟಿ ದೌರ್ಜನ್ಯ ಕಾಯ್ದೆಯಡಿ ತಮ್ಮ ವಿರುದ್ಧ ದಾಖಲಾಗಿ ಪ್ರಕರಣ ದಾಖಲು ಮಾಡಿರುವುದನ್ನು ಪ್ರಶ್ನಿಸಿ ರಸಿಕ್ ಲಾಲ್ ಮತ್ತು ಪುರುಷೋತ್ತಮ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ಇಂತಹ ಪ್ರಕರಣಗಳು ನ್ಯಾಯಾಂಗ ಕ್ಷೇತ್ರದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತಿವೆ ಎಂದು ತಿಳಿಸಿದೆ.
ನಿಜವಾಗಲೂ ಸಮಸ್ಯೆಗೆ ಸಿಲುಕಿದವರು ನ್ಯಾಯಕ್ಕಾಗಿ ಕಾಯುತ್ತಿರುವ ಸಂದರ್ಭದಲ್ಲಿ ಸುಳ್ಳು ಪ್ರಕರಣವನ್ನು ವಿಚಾರಣೆಗೆ ಒಳಪಡಿಸುವುದು ಅಪಹಾಸ್ಯ‘ ಎಂದಿರುವ ನ್ಯಾಯಪೀಠ, ’ಎಸ್ಸಿ–ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿಯ ಸುಳ್ಳು ಪ್ರಕರಣಗಳು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಲಿದೆ. ಇದನ್ನು ನಿಯಂತ್ರಿಸಲು ವಿಫಲವಾದಲ್ಲಿ ಇಡೀ ಅಪರಾಧ ನ್ಯಾಯ ವ್ಯವಸ್ಥೆಗೆ ದೊಡ್ಡ ಹೊರೆಯಾಗಬಹುದು‘ ಎಂಬ ಆತಂಕ ವ್ಯಕ್ತಪಡಿಸಿದೆ.