ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ನಡೆದ ಪ್ರತಿಭಟನೆ ವೇಳೆ 2019ರ ಡಿಸೆಂಬರ್ 19ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಮತ್ತು ಪೊಲೀಸರನ್ನು ಕೊಲೆ ಮಾಡಲು ಸಂಚು ರೂಪಿಸಿದ ಆರೋಪ ಎದುರಿಸುತ್ತಿರುವ 16 ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ಜಾಮೀನು ಕೋರಿ ಮೊಹಮ್ಮದ್ ಸುಹೇಲ್ ಹಾಗೂ ನಾಸೀರುದ್ದೀನ್ ಸೇರಿದಂತೆ 16 ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ಪುರಸ್ಕರಿಸಿದೆ.
‘ಅರ್ಜಿದಾರರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಸಂಗ್ರಹಿಸಿರುವ ದಾಖಲೆಗಳಲ್ಲಿ ನಿರ್ದಿಷ್ಟ ಸಾಕ್ಷ್ಯವಿಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ನ್ಯಾಯ ಪೀಠ ಜಾಮೀನು ನೀಡಿದೆ.
‘ಆರೋಪಿಗಳು ತಲಾ ₹1 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ಒದಗಿಸಬೇಕು. ಪೂರ್ವಾನಮತಿ ಇಲ್ಲದೇ ವಿಚಾರಣಾ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ತೆರಳುವಂತಿಲ್ಲ’ ಎಂಬ ಷರತ್ತುಗಳನ್ನು ವಿಧಿಸಲಾಗಿದೆ.