ಬೆಂಗಳೂರು: ಸ್ಥಳೀಯ ಸಂಸ್ಥೆಗಳ ವಾರ್ಡ್ವಾರು ಮೀಸಲಾತಿ ನಿಗದಿಗೊಳಿಸಿ ಅಂತಿಮ ಅಧಿಸೂಚನೆ ಹೊರಡಿಸಿರುವುದನ್ನು ಪ್ರಶ್ನಿಸಿದ 30ಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆ ಮುಕ್ತಾಯಗೊಳಿಸಿದ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.
ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ಪೂರೈಸಿ, ಆದೇಶ ಕಾಯ್ದಿರಿಸಿರುವುದಾಗಿ ಪ್ರಕಟಿಸಿದೆ.
ಇದೇ ವೇಳೆ ರಾಜ್ಯ ಚುನಾವಣಾ ಆಯೋಗದ ಪರ ಹಾಜರಾಗಿದ್ದ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಅವರು, ‘ಆರು ಮಹಾನಗರ ಪಾಲಿಕೆಗಳೂ ಸೇರಿದಂತೆ 101 ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ವೇಳಾಪಟ್ಟಿಯನ್ನು 2019ರ ಜನವರಿ 16ರವರೆಗೆ ಪ್ರಕಟಿಸುವುದಿಲ್ಲ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ರಾಜ್ಯದಾದ್ಯಂತ 26 ಜಿಲ್ಲೆಗಳಲ್ಲಿನ 2,593 ಸ್ಥಳೀಯ ಸಂಸ್ಥೆಯ ವಾರ್ಡುಗಳಿಗೆ 2019ರ ಮಾರ್ಚ್ನಲ್ಲಿ ಅಧಿಕಾರ ಅವಧಿ ಪೂರ್ಣಗೊಳ್ಳುತ್ತಿದ್ದು, ಚುನಾವಣೆ ನಡೆಸಬೇಕಿದೆ.