ವೀರಶೈವ ಲಿಂಗಾಯತ ಮಂಡಳಿ: ಹೈಕೋರ್ಟ್ ನೋಟಿಸ್

ಬೆಂಗಳೂರು: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿ ಸ್ಥಾಪನೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.
ವಕೀಲ ಎಸ್. ಬಸವರಾಜ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘2020 ನವೆಂಬರ್ 23ರ ಅಧಿಸೂಚನೆಗೆ ಅನುಗುಣವಾಗಿ ರಾಜ್ಯ ಸರ್ಕಾರ ಕೈಗೊಂಡಿರುವ ಎಲ್ಲಾ ಕ್ರಮಗಳು ನ್ಯಾಯಾಲಯದ ಆದೇಶಗಳಿಗೆ ಒಳಪಟ್ಟಿರುತ್ತದೆ’ ಎಂದು ಹೇಳಿದೆ.
‘ಲಿಂಗಾಯತ ಸಮುದಾಯದ ಮತದಾರರನ್ನು ಸೆಳೆಯುವುದು ಈ ಮಂಡಳಿ ಸ್ಥಾಪನೆಯ ಉದ್ದೇಶವಾಗಿದೆ’ ಎಂದು ಅರ್ಜಿದಾರರು ದೂರಿದ್ದಾರೆ.
‘ವೀರಶೈವ ಲಿಂಗಾಯತ ಸಮುದಾಯದವರು ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಮಂಡಳಿಯನ್ನು ಕಂಪನಿ ರೂಪದಲ್ಲಿ ಸ್ಥಾಪಿಸುವುದು ಅಗತ್ಯವೆಂದು ಸರ್ಕಾರ ಪರಿಗಣಿಸುತ್ತದೆ ಎಂದು ಸರ್ಕಾರ ಹೇಳಿದೆ. ಆದರೆ, ಆಡಳಿತ ಪಕ್ಷದ ನಿಷ್ಠರಿಗೆ ಅದರ ಜವಾಬ್ದಾರಿ ವಹಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಮಂಡಳಿ ಸ್ಥಾಪನೆ ಕಾನೂನು ಬಾಹಿರ’ ಎಂದು ಅವರು ಪ್ರತಿಪಾದಿಸಿದ್ದಾರೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.