ಬೆಂಗಳೂರು: ಬಿಜೆಪಿ ಹಾಗೂ ಆರ್ಎಸ್ಎಸ್ ಮುಖಂಡರ ಪರಿಚಯಸ್ಥನೆಂದು ಹೇಳಿಕೊಂಡು ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿರುವ ಆರೋಪದಡಿ ಬಂಧನದಲ್ಲಿರುವ ಯುವರಾಜ್ಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.
ನ್ಯಾಯಮೂರ್ತಿ ಕೆ. ನಟರಾಜನ್ ಅವರು ಜಾಮೀನು ತಿರಸ್ಕರಿಸಿದ್ದು, ಅರ್ಜಿದಾರರ ವಿರುದ್ಧ ಗಂಭೀರ ಆರೋಪಗಳಿವೆ ಮತ್ತು ಕೇಂದ್ರ ಅಪರಾಧ ದಳ (ಸಿಸಿಬಿ) ತನಿಖೆ ನಡೆಸುತ್ತಿದೆ ಎಂದು ಹೇಳಿದ್ದಾರೆ.
ಕೆಎಸ್ಆರ್ಟಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿಸುವುದಾಗಿ ನಂಬಿಸಿದ್ದ ಯುವರಾಜ್, ದೂರುದಾರರ ಬಳಿ ₹1.50 ಕೋಟಿ ಬೇಡಿಕೆ ಇಟ್ಟಿದ್ದರು. ಚೆಕ್ ಮೂಲಕ ₹51 ಲಕ್ಷ ಮತ್ತು ನಗದು ರೂಪದಲ್ಲಿ ₹48.75 ಲಕ್ಷ ಪಡೆದಿದ್ದರು ಎಂಬುದು ಅವರ ಮೇಲಿರುವ ಆರೋಪ.
ಅವರ ಜಾಮೀನು ಅರ್ಜಿಯನ್ನು ಅಧೀನ ನ್ಯಾಯಾಲಯ ಫೆಬ್ರುವರಿ 7ರಂದು ತಿರಸ್ಕರಿಸಿತ್ತು. ಬಳಿಕ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.