ಬೆಂಗಳೂರು: ಸುರಂಜನ ದಾಸ್ ರಸ್ತೆಯಲ್ಲಿನ ಕೆಳ ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಹೈಕೋರ್ಟ್ ಅನುಮತಿ ನೀಡಿದೆ. 10 ಮರಗಳನ್ನು ಕಡಿಯುವುದರಿಂದ ಪರಿಸರಕ್ಕೆ ಹಾನಿಯಾದರೂ, ಇದು ನಗರದ ಅಭಿವೃದ್ಧಿಯ ಗುರಿ ಹೊಂದಿದೆ ಎಂದು ಹೇಳಿದೆ.
ಕಮಾಂಡ್ ಆಸ್ಪತ್ರೆಯಿಂದ ಹೋಪ್ ಫಾರ್ಮ್ ತನಕ ಸಿಗ್ನಲ್ ಮುಕ್ತ ಕಾರಿಡಾರ್ ನಿರ್ಮಿಸುವ ಭಾಗವಾಗಿ ಕೆಳ ಸೇತುವೆ ನಿರ್ಮಿಸಲಾಗುತ್ತಿದೆ. ಕೆಳ ಸೇತುವೆ ನಿರ್ಮಾಣಕ್ಕೆ ನೀಡಿರುವ ಅನುಮತಿಯನ್ನು ಪುನರ್ ಪರಿಶೀಲಿಸುವಂತೆ ಮರ ತಜ್ಞರ ಸಮಿತಿಗೆ ಈ ಹಿಂದಿನ ವಿಚಾರಣೆ ವೇಳೆ ಪೀಠ ತಿಳಿಸಿತ್ತು.
‘ಪರಿಸರಕ್ಕೆ ನಷ್ಟ ಉಂಟಾಗುವುದು ನಿಜ. ಆದರೆ, ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಂಚಾರ ದಟ್ಟಣೆ, ರಸ್ತೆ ಅಪಘಾತ ತಡೆಯಲು 10 ಮರಗಳನ್ನು ಕಡಿಯುವುದು ಅನಿವಾರ್ಯ ಎಂದು ತಜ್ಞರ ಸಮಿತಿ ತಿಳಿಸಿದೆ. ಈ ರಸ್ತೆಯಲ್ಲಿ ಆಸ್ಪತ್ರೆಗಳು ಇರುವುದನ್ನೂ ಗಮನದಲ್ಲಿ ಇಟ್ಟುಕೊಳ್ಳಬೇಕಾಗುತ್ತದೆ’ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ಹೇಳಿತು.
ಇಲ್ಲಿ ಕಡಿಯುವ ಮರಗಳಿಗೆ ಬದಲಾಗಿದೆ ಬೇರೆಡೆ ಸಸಿಗಳನ್ನು ಬೆಳೆಸಬೇಕು. ಈ ಸಂಬಂಧ ರಿಜಿಸ್ಟ್ರಾರ್ ಜನರಲ್ ಅವರಿಗೆ ಅನುಸರಣಾ ವರದಿ ಸಲ್ಲಿಸಬೇಕು ಎಂದು ಬಿಬಿಎಂಪಿಗೆ ಪೀಠ ನಿರ್ದೇಶನ ನೀಡಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.