ಬೆಂಗಳೂರು: ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನಿಶ್ ಮಹೇಶ್ವರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ.
ವೃದ್ಧನ ಮೇಲಿನ ಹಲ್ಲೆಗೆ ಸಂಬಂಧಿಸಿದ ವಿಡಿಯೊ ವೈರಲ್ ಆದ ಪ್ರಕರಣದಲ್ಲಿ ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಲೋನಿ ಬಾರ್ಡರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಆರ್ಪಿಸಿ ಸೆಕ್ಷನ್ 41ಎ ಅಡಿಯಲ್ಲಿ ಪೊಲೀಸರು ನೀಡಿದ್ದ ನೋಟಿಸ್ ಪ್ರಶ್ನಿಸಿ ಮನಿಶ್ ಮಹೇಶ್ವರಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ಯಾವುದೇ ಬಲವಂತದ ಕ್ರಮಗಳನ್ನು ಕೈಗೊಳ್ಳದಂತೆ ಜೂನ್ 24ರಂದು ಮಧ್ಯಂತರ ಆದೇಶ ನೀಡಿದ್ದ ನ್ಯಾಯಮೂರ್ತಿ ಜಿ.ನರೇಂದ್ರ ಅವರಿದ್ದ ಪೀಠ, ಅಗತ್ಯವಿದ್ದರೆ ವರ್ಚುವಲ್ ಮಾದರಿಯಲ್ಲಿ ವಿಚಾರಣೆ ನಡೆಸಬಹುದು ಎಂದು ಹೇಳಿತ್ತು.
‘ಆದರೂ, ಉತ್ತರ ಪ್ರದೇಶ ಪೊಲೀಸರು ವಿಚಾರಣೆ ನಡೆಸಿಲ್ಲ’ ಎಂದು ಮನಿಶ್ ಪರ ವಕೀಲ ಸಿ.ವಿ. ನಾಗೇಶ್ ತಿಳಿಸಿದರು. ವಾದ–ಪ್ರತಿವಾದ ಆಲಿಸಿದ ಪೀಠ ಆದೇಶ ಕಾಯ್ದಿರಿಸಿ, ಮಂಗಳವಾರ ಪ್ರಕಟಿಸುವುದಾಗಿ ತಿಳಿಸಿತು.