ಬೆಂಗಳೂರು: 'ಕೋವಿಡ್-19 ಇರುವ ಕಾರಣ ವಿಚಾರಣಾ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಶೀಘ್ರ ಮುಗಿಯುವುದಿಲ್ಲ. ಈ ಅಂಶವನ್ನು ಪರಿಗಣಿಸಿ ಜಾಮೀನು ನೀಡಬೇಕು' ಎಂದು ಕೊಲೆ ಪ್ರಕರಣದ ಆರೋಪಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಆರೋಪಿ ಹರೀಶ್ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ, 'ಅರ್ಜಿದಾರರ ವಾದ ಸಮರ್ಥನೀಯವಾಗಿಲ್ಲ' ಎಂದು ಹೇಳಿದೆ.
ಕೊಲೆ, ಕೊಲೆ ಯತ್ನ, ಜೀವ ಬೆದರಿಕೆ ಮತ್ತು ಅಕ್ರಮ ಕೂಟ ಸೇರಿದಂತೆ ವಿವಿಧ ಆರೋಪಗಳಡಿ ಉಡುಪಿಯ ಬ್ರಹ್ಮಾವರ ವೃತ್ತದ ಕೋಟ ಠಾಣಾ ಪೊಲೀಸರು ಹರೀಶ್ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಿದ್ದು, ಅವರು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.