ಬೆಂಗಳೂರು:ಘನತ್ಯಾಜ್ಯ ನಿರ್ವಹಣಾ ನಿಯಮಗಳು- 2016ರ ನಿಬಂಧನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆಹೈಕೋರ್ಟ್ ನಿರ್ದೇಶನ ನೀಡಿದೆ.
ಮಂಗಳೂರಿನ ಪಚ್ಚನಾಡಿ ನೆಲಭರ್ತಿ ಘಟಕದಲ್ಲಿ ಸಂಭವಿಸಿದ ಭೂಕುಸಿತಕ್ಕೆ ಸಂಬಂಧಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಲು ಆದೇಶಿಸಿದೆ.
‘2019ರಲ್ಲಿಪಚ್ಚನಾಡಿಯಲ್ಲಿ ಸಂಭವಿಸಿದ ಭೂಕುಸಿತದಿಂದ 18 ಎಕರೆ ಹಾನಿಗೀಡಾಗಿದೆ. ಈ ಬಗ್ಗೆ ವರದಿ ಪಡೆಯಲು ಜಿಲ್ಲಾ ನ್ಯಾಯಾಧೀಶರು ಅಥವಾ ಹೆಸರಾಂತ ಸಂಸ್ಥೆಗೆ ಜವಾಬ್ದಾರಿ ವಹಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.
‘ಹಲವಾರು ಮನೆಗಳು, ಪೂಜಾ ಸ್ಥಳಗಳು ಮುಳುಗಿ ಹೋಗಿವೆ. ಇದರಿಂದ ಸಂಕಷ್ಟಕ್ಕೆ ಸಿಲುಕಿರುವವರಿಗೆ ₹22.4 ಕೋಟಿ ಮಧ್ಯಂತರ ಪರಿಹಾರ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.
‘ಘನತ್ಯಾಜ್ಯ ನಿರ್ವಹಣೆ ಸಂಬಂಧ ರಾಜ್ಯ ಸರ್ಕಾರ ಬೈ-ಲಾ ಮತ್ತು ನಿಯಮಗಳನ್ನು ರೂಪಿಸಿದೆ. ಆದರೆ, ಇವುಗಳನ್ನು ಯಾವುದೇ ನಗರ ಪಾಲಿಕೆಗಳು ಪಾಲಿಸುತ್ತಿಲ್ಲ’ ಎಂದು ಅರ್ಜಿದಾರರ ಪರ ವಕೀಲರು ದೂರಿದರು.
ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಅರ್ಜಿದಾರರು ಕೋರಿದ ಮಧ್ಯಂತರ ಪರಿಹಾರದ ಮನವಿಯನ್ನು ಮುಂದಿನ ವಿಚಾರಣೆ ವೇಳೆ ಪರಿಗಣಿಸಲಾಗುವುದು’ ಎಂದು ತಿಳಿಸಿತು.
‘ಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಗಣನೀಯವಾಗಿ ಜಾರಿಗೆ ತಂದಿರುವ ಒಂದೇ ಒಂದು ಪ್ರಾಧಿಕಾರ ಇದೆಯೇ ಎಂಬುದನ್ನು ತಿಳಿಸಬೇಕು’ ಎಂದು ಸರ್ಕಾರವನ್ನು ಪೀಠ ಪ್ರಶ್ನಿಸಿತು.