ಬೆಂಗಳೂರು: ‘ಆಧ್ಯಾತ್ಮದ ಹೆಸರಲ್ಲಿ ಏನು ಬೇಕಾದರೂ ಮಾಡಿದರೆ ನಡೆಯುತ್ತದೆ ಎಂದು ಕೊಂಡಿದ್ದೀರಾ’ ಎಂದು ಹೈಕೋರ್ಟ್ ಈಶಫೌಂಡೇಷನ್ ಅನ್ನು ಪ್ರಶ್ನಿಸಿದೆ.
‘ಕಾವೇರಿ ಕೂಗು’ ಅಭಿಯಾನದ ಹೆಸರಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹಿಸುವುದನ್ನು ಪ್ರಶ್ನಿಸಿ ವಕೀಲ ಎ.ವಿ. ಅಮರನಾಥನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಸಂಸ್ಥೆ ಸಾರ್ವಜನಿಕರಿಂದ ಬಲವಂತವಾಗಿ ಹಣ ಸಂಗ್ರಹ ಮಾಡುತ್ತಿಲ್ಲ. ನದಿ ಪುನಶ್ಚೇತನ ಹಾಗೂ ಪರಿಸರದ ಬಗ್ಗೆ ರೈತರಲ್ಲಿ ಅರಿವು ಮೂಡಿಸುವ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.
ಇದಕ್ಕೆ ನ್ಯಾಯಪೀಠ, ‘ಯಾವ ಅಧಿಕಾರದಲ್ಲಿ ನೀವು ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದೀರಿ, ನಿಮ್ಮ ಸಂಸ್ಥೆಗೆ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿಯನ್ನು ನೇಮಕ ಮಾಡಿದ್ದು ಯಾರು, ನೀವು ಹಣ ಸಂಗ್ರಹ ಮಾಡುತ್ತಿರುವ ವಿಚಾರ ಆ ನ್ಯಾಯಮೂರ್ತಿಗಳಿಗೆ ಗೊತ್ತಿದೆಯೇ’ ಎಂದು ಪ್ರಶ್ನಿಸಿತು.
‘ಈವರೆಗೆ ಯಾವ ವಿಧಾನದಿಂದ ಎಷ್ಟು ಹಣ ಸಂಗ್ರಹಿಸಲಾಗಿದೆ ಮತ್ತು ಸಂಸ್ಥೆಯು ಯಾವ ಕಾಯ್ದೆಯಡಿ ನೊಂದಾವಣೆ ಮಾಡಿಕೊಂಡಿದೆ ಎಂಬ ಬಗ್ಗೆ ನ್ಯಾಯಾಲಯಕ್ಕೆ ಹೇಳಿಕೆ ಸಲ್ಲಿಸಿ’ ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು.
ಇದೇ ವೇಳೆ ಸರ್ಕಾರದ ಪರ ವಕೀಲರು ಪ್ರಮಾಣಪತ್ರ ಸಲ್ಲಿಸಿ, ‘ಹಣ ಸಂಗ್ರಹಕ್ಕೆ ಸರ್ಕಾರ ಅನುಮತಿ ನೀಡಿಲ್ಲ’ ಎಂದು ಸ್ಪಷ್ಟಪಡಿಸಿದರು.
‘ಸರ್ಕಾರಿ ಜಮೀನಿನಲ್ಲಿ ಸಸಿಗಳನ್ನು ನಡೆಲು ಸಾರ್ವಜನಿಕರಿಂದ ಒಂದು ಸಸಿಗೆ ₹ 42ರಂತೆ ಕೋಟ್ಯಂತರ ರೂಪಾಯಿ ಸಂಗ್ರಹಿಸಲಾಗುತ್ತಿದೆ’ ಎಂಬುದು ಅರ್ಜಿದಾರರ ಆರೋಪ.