ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹಿಂದುತ್ವ ಪ್ರತಿಪಾದನೆ: ಸಮಾನತೆಗೆ ತೊಡಕು’

ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅಭಿಮತ l ಕೆಆರ್‌ಎಸ್ ಪಕ್ಷ ಉದ್ಘಾಟನೆ
Last Updated 10 ಆಗಸ್ಟ್ 2019, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ದೇಶದಲ್ಲಿ ಸದ್ಯದ ಪರಿಸ್ಥಿತಿ ಆತಂಕವನ್ನು ಹುಟ್ಟಿಸುತ್ತಿದೆ. ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಜೈನ ಸೇರಿದಂತೆ ವಿವಿಧ ಧರ್ಮದವರ ಮೇಲೆ ಹಿಂದುತ್ವ ಹೇರುವುದರಿಂದ ಸಮಾನತೆ ತರಲು ಸಾಧ್ಯವಿಲ್ಲ’ ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅಭಿಪ್ರಾಯಪಟ್ಟರು.

ನಗರದಲ್ಲಿ ಶನಿವಾರ, ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

‘ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸಮಾನ ಅವಕಾಶ ಸಿಗಬೇಕು. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಅಭಿವೃದ್ಧಿಯ ಹೆಸರಿನಲ್ಲಿ ಹಿಂದುತ್ವ ಪ್ರತಿಪಾದನೆ ಮಾಡಲಾಗುತ್ತಿದೆ’ ಎಂದರು.

‘60–70ವರ್ಷ ಆಳ್ವಿಕೆ ಮಾಡಿದ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಅಭಾವವಿದೆ. ಹಿಂದೆ ಪ್ರತಿ ರಾಜ್ಯದಲ್ಲಿ ಇಬ್ಬರು ರಾಷ್ಟ್ರಮಟ್ಟದ ನಾಯಕರು ಕಾಣಸಿಗುತ್ತಿದ್ದರು. ರಾಜಕಾರಣ ಹದಗೆಟ್ಟಿದ್ದು, ಪಕ್ಷದೊಳಗೆ ಅಧಿಕಾರಕ್ಕಾಗಿ ನಾಯಕರು ಪರಸ್ಪರ ಕತ್ತಿ ಮಸೆಯುತ್ತಿದ್ದಾರೆ. ರಾಜೀನಾಮೆ ನೀಡುವ ರಾಜಕಾರಣಿಗಳ ಕಾಲು ಹಿಡಿಯುವ ಮಟ್ಟಕ್ಕೆ ರಾಜಕಾರಣ ತಲುಪಿರುವುದು ಬೇಸರದ ಸಂಗತಿ’ ಎಂದರು.

ಸಾಮಾಜಿಕ ಕಾರ್ಯಕರ್ತ ಎಸ್‌.ಆರ್. ಹಿರೇಮಠ, ‘ಅಭಿವೃದ್ಧಿಯ ಹೆಸರಿನಲ್ಲಿ ನಿಸರ್ಗದ ಮೇಲೆ ಪ್ರಹಾರ ಮಾಡುತ್ತಿರುವುದರಿಂದಲೇ ಪ್ರಾಕೃತಿಕ ವಿಕೋಪಗಳು ಕಾಣಿಸಿಕೊಳ್ಳುತ್ತಿವೆ. ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ ಆಗಬೇಕು. ರೈತರ ಸಮಸ್ಯೆ ನಿವಾರಣೆಗೆ ಸರ್ಕಾರ ಆದ್ಯತೆ ನೀಡಿ, ಹೊಸ ಆರ್ಥಿಕ ನೀತಿ ಜಾರಿ ಮಾಡಬೇಕು’ ಎಂದು ಒತ್ತಾಯಿಸಿದರು.

ಪಕ್ಷದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ, ‘ರಾಜ್ಯದ ಸಮಗ್ರ ಅಭಿವೃದ್ಧಿಗೆ ನೀಲ ನಕ್ಷೆ ರೂಪಿಸಲಾಗಿದೆ. ಬಡತನ ನಿವಾರಣೆಗೆ ಸಂಪೂರ್ಣವಾಗಿ ಮದ್ಯ ನಿಷೇಧ, ಉದ್ಯೋಗದಲ್ಲಿ ಕನ್ನಡಿಗರಿಗೆ ಆದ್ಯತೆ, ನಿರುದ್ಯೋಗಿ ಪದವೀಧರರಿಗೆ ಮಾಸಾಶನ, ಬಿಬಿಎಂಪಿ ಕಚೇರಿಗಳಲ್ಲಿ ಪಾರದರ್ಶಕತೆ, ಭ್ರಷ್ಟಾಚಾರಕ್ಕೆ ಕಡಿವಾಣ, ನೀರಿನ ಸದ್ಬಳಕೆ ಸೇರಿದಂತೆ ವಿವಿಧ ಯೋಜನೆಗಳು ಇದರಲ್ಲಿ ಸೇರಿವೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT