ಬೆಂಗಳೂರು: ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ವತಿಯಿಂದ ರಾಜಾಜಿನಗರದ ರಾಮಮಂದಿರದ ಮೈದಾನದಲ್ಲಿ ಭಾನುವಾರ ಹೋಳಿ ಹಬ್ಬವನ್ನು ಆಚರಿಸಲಾಯಿತು.
ಬೆಂಗಳೂರಿನಲ್ಲಿ ವಾಸವಾಗಿರುವ ಉತ್ತರ ಕರ್ನಾಟಕ ಭಾಗದ ಜನ ಪ್ರತಿವರ್ಷದಂತೆ ಈ ವರ್ಷವೂ ಕಾಮದಹನ ಮಾಡಿ, ಬಣ್ಣದೋಕುಳಿ ಆಡಿ, ಸಂಭ್ರಮದಿಂದ ಹೋಳಿ ಹಬ್ಬ ಆಚರಿಸಿದರು.
ಮಹಾಸಂಸ್ಥೆಯ ಅಧ್ಯಕ್ಷ ಶಿವಕುಮಾರ್ ಮೇಟಿ, ‘ನಮ್ಮ ಉತ್ತರ ಕರ್ನಾಟಕ ಭಾಗದ ಸಂಸ್ಕೃತಿಯ ಪ್ರತಿಬಿಂಬವಾಗಿ ಹೋಳಿ ಹಬ್ಬವನ್ನು ಆಚರಿಸಲಾಗುತ್ತಿದೆ. ನಮ್ಮ ಭಾಗದಲ್ಲಿ ಈ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಬೆಂಗಳೂರಿನಲ್ಲಿರುವ ಉತ್ತರ ಕರ್ನಟಕದ ಜನ ನಮ್ಮ ಸಂಸ್ಕೃತಿ ಪರಂಪರೆ ಉಳಿಸಿಕೊಂಡು ಹೋಗುವ ಉದ್ದೇಶದಿಂದ ಪ್ರತಿವರ್ಷ ಈ ಹಬ್ಬ ಆಚರಿಸುತ್ತಿದ್ದೇವೆ’ ಎಂದು ಹೇಳಿದರು.
ಮಹಾಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಕರ ಪಾಗೋಜಿ, ‘ಉತ್ತರ ಕರ್ನಾಟಕ ಭಾಗದಲ್ಲಿ ಐದು ದಿಗಳು ಹೋಳಿ ಹಬ್ಬ ಆಚರಿಸಲಾಗುತ್ತಿದೆ. ಕಾಮಣ್ಣನ ಕೂಡಿಸುವುದು, ಹೋಳಿ ಹಾಡು ಹಾಡುವುದು, ಕಾಮದಹನ ಮಾಡುವ ಕಾರ್ಯಕ್ರಮಗಳನ್ನು ಎಲ್ಲರೂ ಸೇರಿ ಆಚರಿಸುತ್ತೇವೆ’ ಎಂದರು
‘ಉತ್ತರ ಕರ್ನಾಟಕದಿಂದ ಬೆಂಗಳೂರಿನಲ್ಲಿ ನೆಲೆಸಿರುವ ಜನರು ನಮ್ಮ ಭಾಗದ ಪ್ರಮುಖ ಸಾಂಸ್ಕೃತಿಕ ಹಬ್ಬಗಳಾದ ರೊಟ್ಟಿ ಪಂಚಮಿ, ಬನ್ನಿ ಬಂಗಾರ ಹಬ್ಬ, ಹೋಳಿ ಹಬ್ಬವನ್ನು ಬೆಂಗಳೂರಿನಲ್ಲಿ ಆಚರಿಸುವ ಮೂಲಕ ನಮ್ಮ ಸಂಸ್ಕೃತಿ ಉಳಿಸಿ ಬೆಳೆಸುವುದರ ಜೊತೆಗೆ ಮುಂದಿನ ಪೀಳಿಗೆಗೆ ಅದನ್ನು ಪರಿಚಯಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಮಹಾಸಂಸ್ಥೆಯ ಕಾರ್ಯದರ್ಶಿ ಬಸಯ್ಯ ನಂದಿಕೋಲ್, ಶಿವಕುಮಾರ್ ಸರಶೆಟ್ಟಿ, ಭೀಮಪ್ಪ ನಾಲತ್ವಾಡ್ ಭಾಗವಹಿಸಿದ್ದರು.