ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಡ್ರಗ್ಸ್‌ ಪ್ರಕರಣದ ತಾರ್ಕಿಕ ಅಂತ್ಯಕ್ಕೆ ಪೊಲೀಸರಿಗೆ ಪೂರ್ಣ ಸ್ವಾತಂತ್ರ್ಯ'

ಸಿಎಂಗೆ ಸಂಪೂರ್ಣ ಮಾಹಿತಿ ನೀಡಿದ ಗೃಹ ಸಚಿವ
Last Updated 7 ಸೆಪ್ಟೆಂಬರ್ 2020, 13:07 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಡ್ರಗ್ಸ್‌ ಜಾಲದ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಮುಟ್ಟಿಸಲಾಗುವುದು. ಈ ಸಂಬಂಧ ಪೊಲೀಸರಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಡ್ರಗ್ಸ್‌ ಪ್ರಕರಣಗಳಿಗೆ ಸಂಬಂಧಿಸಿದಂತೆ ಈವರೆಗೆ ಆಗಿರುವ ತನಿಖೆಯ ಪ್ರಗತಿ ಕುರಿತು ಸೋಮವಾರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮಾಹಿತಿ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.

ಪೊಲೀಸರು ನಿಷ್ಪಕ್ಷವಾಗಿ ತನಿಖೆ ನಡೆಸುತ್ತಿದ್ದಾರೆ. ಯಾರದ್ದೇ ಒತ್ತಡವೂ ಪೊಲೀಸರ ಮೇಲಿಲ್ಲ. ಇದರಿಂದಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗಿವೆ. ಪ್ರತಿ ದಿನವೂ ಹೊಸ ಮಾಹಿತಿಗಳು ಮತ್ತು ಸಾಕ್ಷ್ಯಗಳು ಬಯಲಿಗೆ ಬರುತ್ತಿವೆ. ಹಲವರು ಸಿಕ್ಕಿ ಬೀಳುತ್ತಿದ್ದಾರೆ. ಜಾಲವನ್ನು ಸಂಪೂರ್ಣ ಬಯಲಿಗೆಳೆಯಬೇಕಾಗಿರುವುದರಿಂದ ಈ ಹಂತದಲ್ಲಿ ಸೂಕ್ಷ್ಮ ಮಾಹಿತಿಗಳನ್ನು ಮಾಧ್ಯಮಗಳಿಗೆ ನೀಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಬೆಂಗಳೂರು ಮತ್ತು ರಾಜ್ಯದ ವಿವಿಧ ಭಾಗಗಳಿಗೆ ಇತರ ರಾಜ್ಯಗಳಿಂದ ಮಾದಕ ದ್ರವ್ಯಗಳು ಬರುತ್ತಿವೆ. ಈ ಕುರಿತು ತನಿಖೆ ನಡೆಸಲು ಜಿಲ್ಲಾಧಿಕಾರಿಗಳು ಮತ್ತು ಎಸ್ಪಿಗಳಿಗೆ ಸೂಚಿಸಲಾಗಿದೆ. ನೆರೆ ರಾಜ್ಯಗಳ ಪೊಲೀಸ್‌ ಅಧಿಕಾರಿಗಳ ಜತೆ ಸಂಪರ್ಕದಲ್ಲಿರಲೂ ಸೂಚಿಸಲಾಗಿದೆ. ಗಡಿಯಲ್ಲಿರುವ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಾದ ತಪಾಸಣೆ ನಡೆಸಲಾಗುವುದು. ಇದಕ್ಕಾಗಿ ಅಧಿಕಾರಿಗಳ ಸಭೆ ನಡೆಸಿ ಹಲವು ಸಲಹೆ ಸೂಚನೆಗಳನ್ನು ನೀಡಲಾಗಿದೆ ಎಂದು ಬೊಮ್ಮಾಯಿ ಹೇಳಿದರು.

ತನಿಖೆಯ ಹಿಂದೆ ಯಾವುದೇ ರಾಜಕೀಯ ಒತ್ತಡಗಳಿಲ್ಲ. ಈ ಜಾಲ ಎಷ್ಟೇ ಪ್ರಬಲವಾಗಿದ್ದರೂ ಸರಿ, ಮಟ್ಟ ಹಾಕದೇ ಬಿಡುವುದಿಲ್ಲ. ಬಂಧನದ ಭೀತಿಯಿಂದ ತಲೆ ಮರೆಸಿಕೊಂಡವರು ಎಲ್ಲಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ ಎಂದರು.

ಡ್ರಗ್ಸ್‌ ಜಾಲವನ್ನು ಮಟ್ಟ ಹಾಕಲು ಈವರೆಗೆ ಕೈಗೊಂಡಿರುವ ಕ್ರಮಗಳು ಸಿಸಿಬಿ ಮತ್ತು ತನಿಖೆಯ ಹಿಂದಿನ ಜಾಲ, ಅಂತರ ರಾಷ್ಟ್ರೀಯ ಸಂಪರ್ಕ, ಬಂಧನದಲ್ಲಿರುವ ಆರೋಪಿಗಳ ಹಿನ್ನೆಲೆಯ ಕುರಿತು ಮುಖ್ಯಮಂತ್ರಿಗೆ ಸಂಪೂರ್ಣ ಮಾಹಿತಿ ನೀಡಿದ್ದೇನೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT