ಬೆಂಗಳೂರು: ನೂತನ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬೆಂಗಳೂರಿನ ಸಂಚಾರ ನಿರ್ವಹಣಾ ಕೇಂದ್ರಕ್ಕೆ (ಟಿಎಂಸಿ) ಮಂಗಳವಾರ ಭೇಟಿ ನೀಡಿ, ವ್ಯವಸ್ಥೆ ಬಗ್ಗೆ ತಿಳಿದುಕೊಂಡರು.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಜೊತೆಯಲ್ಲಿ ಕೇಂದ್ರಕ್ಕೆ ಬಂದಿದ್ದ ಸಚಿವ, ಕೇಂದ್ರದ ಕೆಲಸಗಳ ಬಗ್ಗೆ ಜಂಟಿ ಕಮಿಷನರ್ ಬಿ.ಆರ್. ರವಿಕಾಂತೇಗೌಡ ಅವರಿಂದ ಮಾಹಿತಿ ಪಡೆದುಕೊಂಡರು.
ನಗರದ ಪ್ರಮುಖ ವೃತ್ತ ಹಾಗೂ ರಸ್ತೆಗಳಲ್ಲಿ ಅಳವಡಿಸಿರುವ ಕ್ಯಾಮೆರಾಗಳು, ಅವುಗಳಲ್ಲಿ ಸೆರೆಯಾಗುವ ದೃಶ್ಯಗಳು ಹಾಗೂ ದಂಡ ವಿಧಿಸುವ ಪ್ರಕ್ರಿಯೆಯನ್ನು ವೀಕ್ಷಿಸಿದರು. ಕೇಂದ್ರದ ಕಾರ್ಯಾಚರಣೆ ಬಗ್ಗೆಯೂ ಸಿಬ್ಬಂದಿ ಅಭಿಪ್ರಾಯ ಪಡೆದರು.
ಇದೇ ವೇಳೆಯೇ ಅಧಿಕಾರಿಗಳ ಸಭೆ ನಡೆಸಿದ ಸಚಿವ ಜ್ಞಾನೇಂದ್ರ, ನಗರದ ಸಂಚಾರ ವ್ಯವಸ್ಥೆ ಬಗ್ಗೆ ವಿಚಾರಿಸಿದರು ಎಂದು ಗೊತ್ತಾಗಿದೆ.